ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರು, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ರಾಯಚೂರು, ಕಲಬುರಗಿ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಟ್ಟು 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹಿಸಿರುವ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ ಆಸ್ತಿ ದಾಖಲೆಗಳು, ಬ್ಯಾಂಕ್ ವ್ಯವಹಾರಗಳು, ಹಣಕಾಸು ದಾಖಲೆಗಳು ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ದಾಳಿ ನಡೆದ ಅಧಿಕಾರಿಗಳ ವಿವರ:
- ಬಸನಗೌಡ ಪಾಟೀಲ್ - ಕಾರ್ಯನಿರ್ವಾಹಕ ಎಂಜಿನಿಯರ್, ಕೃಷ್ಣಾ ಭಾಗ್ಯ ಜಲನಿಗಮ, ರಾಯಚೂರು
- ಶಂಕರ್ ಎಂ. - ಸಹಾಯಕ ಪ್ರಾಧ್ಯಾಪಕ, ತೋಟಗಾರಿಕೆ ವಿಶ್ವವಿದ್ಯಾಲಯ, ಚಿತ್ರದುರ್ಗ
- ದುಗ್ಗಪ್ಪ ಬಿ.ಹೆಚ್. - ವಲಯ ಅರಣ್ಯ ಅಧಿಕಾರಿ, ಜಲಾನಯನ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ
- ನರೇಂದ್ರ ಕುಮಾರ್ - ಕಾರ್ಯನಿರ್ವಾಹಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಬೆಂಗಳೂರು
- ಪ್ರವೀಣ್ ಬಿ. ಶ್ರೀಹರಿ - ಸೂಪರಿಂಟೆಂಡಿಂಗ್ ಎಂಜಿನಿಯರ್, ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ, ಬೆಂಗಳೂರು
- ಪುಷ್ಪ ಡಿ.ಆರ್. - ಉಪ ನಿರ್ದೇಶಕಿ (ಆಡಳಿತ), ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ), ಬೆಂಗಳೂರು
- ಮಧುಸೂಧನ್ ಎನ್. - ಸಹಾಯಕ ಎಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ತುಮಕೂರು
- ತಿಮ್ಮೇಗೌಡ - ಪಿಡಿಒ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ದಕ್ಷಿಣ
- ಕಿರಣ್ ಅಂಗಡಿ - ಸಹಾಯಕ ಅರಣ್ಯ ಪರಿವರ್ತಕ, ಸಂಶೋಧನಾ ವಿಭಾಗ, ಶಿವಮೊಗ್ಗ
- ಅಮೃತ್ ರಾವ್ - ಸಹಾಯಕ ಇಂಜಿನಿಯರ್, ಜೆಸ್ಕಾಂ, ಕಲಬುರಗಿ
ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗಿನಿಂದಲೇ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದು, ಅಧಿಕಾರಿಗಳ ಆಸ್ತಿ-ಪಾಸ್ತಿ, ಹಣಕಾಸು ವ್ಯವಹಾರಗಳು ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

