ನವದೆಹಲಿ: ನರೇಂದ್ರ ಮೋದಿ ಅವರು 'ಆಪರೇಷನ್ ಸಿಂಧೂರ್' ವಾರ್ಷಿಕೋತ್ಸವದ ಅಂಗವಾಗಿ ಭಾರತೀಯ ಸಶಸ್ತ್ರ ಪಡೆಗಳ ಧೈರ್ಯ ಮತ್ತು ಶೌರ್ಯಕ್ಕೆ ಗೌರವ ಸಲ್ಲಿಸಿದ್ದಾರೆ. ಈ ಹಿನ್ನೆಲೆ, ತಮ್ಮ ಸಾಮಾಜಿಕ ಜಾಲತಾಣ X ಖಾತೆಯ ಡಿಪಿಯಲ್ಲಿ 'ಆಪರೇಷನ್ ಸಿಂದೂರ್'ಗೆ ಸಂಬಂಧಿಸಿದ ಚಿತ್ರವನ್ನು ಅಳವಡಿಸಿಕೊಂಡಿದ್ದಾರೆ.
ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ ಘಟನೆಗೆ ಪ್ರತಿಯಾಗಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶಗಳಲ್ಲಿ ಭಯೋತ್ಪಾದಕ ಸಂಘಟನೆಗಳ ತಾಣಗಳ ಮೇಲೆ ದಾಳಿ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೋಯ್ಬಾ, ಜೈಶ್-ಇ-ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಈ ವೇಳೆ 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿಸಲಾಗಿತ್ತು.
ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಡ್ರೋನ್ ಹಾಗೂ ಶೆಲ್ ದಾಳಿಗಳನ್ನು ನಡೆಸಿದ್ದು, ಎರಡೂ ರಾಷ್ಟ್ರಗಳ ನಡುವೆ ನಾಲ್ಕು ದಿನಗಳ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರತವು ಈ ಅವಧಿಯಲ್ಲಿ ಬಲಿಷ್ಠ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಂಡಿತ್ತು. ಬಳಿಕ ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಮಟ್ಟದಲ್ಲಿ ಮಾತುಕತೆ ನಡೆದು, ಮೇ 10ರಂದು ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿತ್ತು.
ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, "ಆಪರೇಷನ್ ಸಿಂಧೂರ್ ಭಯೋತ್ಪಾದನೆ ವಿರುದ್ಧ ಭಾರತದ ಕಠಿಣ ನಿಲುವು ಹಾಗೂ ರಾಷ್ಟ್ರೀಯ ಭದ್ರತೆ ಕಾಪಾಡುವ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ" ಎಂದು ಹೇಳಿದ್ದಾರೆ. ಜೊತೆಗೆ, ಭಾರತೀಯ ಸಶಸ್ತ್ರ ಪಡೆಗಳ ವೃತ್ತಿಪರತೆ, ಸನ್ನದ್ಧತೆ ಮತ್ತು ಸಂಘಟಿತ ಸಾಮರ್ಥ್ಯ ಈ ಕಾರ್ಯಾಚರಣೆಯಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ ಎಂದು ಅವರು ಪ್ರಶಂಸಿಸಿದರು.
ಭಾರತ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಕೈಗೊಂಡಿರುವ ಪ್ರಯತ್ನಗಳು ದೇಶದ ರಾಷ್ಟ್ರೀಯ ಭದ್ರತೆಯನ್ನು ಇನ್ನಷ್ಟು ಬಲಪಡಿಸಿವೆ ಎಂಬುದನ್ನೂ ಪ್ರಧಾನಿ ಒತ್ತಿ ಹೇಳಿದ್ದಾರೆ.

