ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೆ ಇಂಧನ ಇಲಾಖೆ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಬಾಡಿಗೆ ಅಗ್ರಿಮೆಂಟ್ ಕಾಪಿ ಇಲ್ಲದಿದ್ದರೂ ಬಾಡಿಗೆದಾರರು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.
ಬಾಡಿಗೆ ಒಪ್ಪಂದದ ಪ್ರತಿ ಇಲ್ಲದಿದ್ದರೆ, ಬೆಸ್ಕಾಂ (BESCOM) ಅಧಿಕಾರಿಗಳು ನೀಡುವ ಹೊಸ ಫಾರಂನಲ್ಲಿ ಮನೆ ಮಾಲೀಕರು ಮತ್ತು ಬಾಡಿಗೆದಾರರು ಸಹಿ ಮಾಡಿ ಸಲ್ಲಿಸಬೇಕು.
ಇದಕ್ಕಾಗಿ ಇಂಧನ ಇಲಾಖೆ ವಿಶೇಷ ಫಾರಂ ಸಿದ್ಧಪಡಿಸಿದೆ.
ಗ್ರಾಮೀಣ ಭಾಗಗಳಲ್ಲಿ ಅಗ್ರಿಮೆಂಟ್ ಕಾಪಿ ಇಲ್ಲದ ಕಾರಣ ಹಲವು ಬಾಡಿಗೆದಾರರು ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಲು ಸಮಸ್ಯೆ ಎದುರಿಸುತ್ತಿದ್ದರು. ಈ ಸಮಸ್ಯೆ ಪರಿಹರಿಸಲು ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇಲ್ಲ
ಇದೇ ವೇಳೆ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಮಾಡಲಾಗುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಜುಲೈ ತಿಂಗಳ ವಿದ್ಯುತ್ ಬಿಲ್ ಅನ್ನು ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ನೀಡಲಾಗುತ್ತದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಗೃಹಜ್ಯೋತಿ ಫಲಾನುಭವಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಇಲಾಖೆ ಮಾಹಿತಿ ನೀಡಿದೆ.

