ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ನಡುವೆ ಪತಿಯೇ ಪತ್ನಿಯನ್ನು ವೈರ್ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು 35 ವರ್ಷದ ಪವಿತ್ರಾ ಎಂದು ಗುರುತಿಸಲಾಗಿದೆ.
ಕೊಲೆ ಮಾಡಿದ ಬಳಿಕ ಆರೋಪಿ ಪತಿ ವೆಂಕಟೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ದಂಪತಿಗೆ ಮದುವೆಯಾಗಿ ಸುಮಾರು 15 ವರ್ಷಗಳಾಗಿದ್ದು, ಮೂವರು ಮಕ್ಕಳಿದ್ದಾರೆ. ವೆಂಕಟೇಶ್ಗೆ ಕುಡಿತದ ಚಟವಿದ್ದು, ಸಾಲದ ಸಮಸ್ಯೆಯಿಂದ ಕುಟುಂಬದಲ್ಲಿ ನಿರಂತರ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಮನೆ ಒತ್ತೆ ಇಡುವ ವಿಚಾರ ಸೇರಿದಂತೆ ಆರ್ಥಿಕ ಸಂಕಷ್ಟಗಳು ದಂಪತಿ ನಡುವೆ ಗಂಭೀರ ವಾಗ್ವಾದಕ್ಕೆ ಕಾರಣವಾಗಿದ್ದು, ಇದೇ ಕಾರಣಕ್ಕೆ ಇಂದು ನಡೆದ ಜಗಳ ತೀವ್ರಗೊಂಡು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ನಂತರ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ವೆಂಕಟೇಶ್ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

