ಬೈಂದೂರು: ಪ್ರವಾಸಕ್ಕೆಂದು ಕರಾವಳಿಗೆ ಆಗಮಿಸಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಆಯುಷ್ (16) ಎಂದು ಗುರುತಿಸಲಾಗಿದೆ.
ಹಾವೇರಿ ಸಮೀಪದ ಕೃಷಿ ನಗರ ಮೂಲದ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು ಏಳು ಮಂದಿ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಬಂದಿದ್ದರು.
ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ಕುಟುಂಬದವರು ಊಟದ ಸಿದ್ಧತೆಯಲ್ಲಿ ನಿರತರಾಗಿದ್ದರು. ಈ ಸಂದರ್ಭದಲ್ಲಿ ಆಯುಷ್ ಹಾಗೂ ಮತ್ತೊಬ್ಬ ಬಾಲಕ ಸಮೀಪದ ಹೊಳೆಗೆ ಸ್ನಾನಕ್ಕೆ ತೆರಳಿದ್ದಾರೆ.
ಈಜಲು ನೀರಿನ ಆಳವಿರುವ ಪ್ರದೇಶಕ್ಕೆ ತೆರಳಿದ ಆಯುಷ್, ಆಳದ ಬಗ್ಗೆ ಅರಿವಿಲ್ಲದೆ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಜೊತೆಯಲ್ಲಿದ್ದ ಬಾಲಕ ತಕ್ಷಣ ಕುಟುಂಬಸ್ಥರಿಗೆ ಮಾಹಿತಿ ನೀಡಿದರೂ ರಕ್ಷಣೆ ಕಾರ್ಯ ಯಶಸ್ವಿಯಾಗಲಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಧಾವಿಸಿ ಸುಮಾರು ಒಂದು ಗಂಟೆ ಕಾಲ ಶೋಧ ಕಾರ್ಯ ನಡೆಸಿದ ಬಳಿಕ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಮೃತ ಬಾಲಕನ ತಂದೆ-ತಾಯಿ ಗುಜರಾತ್ನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದು, ಆಯುಷ್ ಅಲ್ಲಿಯೇ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬೈಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

