ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕಾಗಿ ಮನೆಗೆ ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ.
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜುಲೈ 6ರಂದು ಎಸ್ಐಆರ್ ಪ್ರಕ್ರಿಯೆಯ ಭಾಗವಾಗಿ ಎಎಲ್ಒ ಮಾಧವ ಅವರೊಂದಿಗೆ ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಅವರ ಮನೆಗೆ ಭೇಟಿ ನೀಡಿದ್ದರು.
ದೂರಿನ ಪ್ರಕಾರ, ಮನೆಯ ಅಂಗಳಕ್ಕೆ ಪ್ರವೇಶಿಸಿದ ವೇಳೆ, "ನೀನು ಅಲ್ಲಿಯೇ ನಿಲ್ಲು, ನಿಮ್ಮ ಜಾತಿಯವರು ಈ ಕಡೆ ಬರಬಾರದು" ಎಂದು ಹೇಳಿ ಮನೆಯ ಸಿಟ್ಔಟ್ಗೆ ಪ್ರವೇಶಿಸದಂತೆ ಮೆಟ್ಟಿಲಿನ ಬಳಿಯೇ ತಡೆದು ನಿಲ್ಲಿಸಲಾಗಿದೆ. ಈ ಮೂಲಕ ಜಾತಿ ನಿಂದನೆ ಮಾಡಿ ಸಾರ್ವಜನಿಕವಾಗಿ ಅವಮಾನಿಸಲಾಗಿದೆ ಎಂದು ಬಿಎಲ್ಒ ಆರೋಪಿಸಿದ್ದಾರೆ.
ಈ ಘಟನೆ ಕುರಿತು ಜುಲೈ 7ರಂದು ಬಿಎಲ್ಒ ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಯಶೋಧ ಆಚಾರಿ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಸೆಕ್ಷನ್ 3(1)(r) ಮತ್ತು 3(2)(va) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಎಸ್ಐಆರ್ ಪ್ರಕ್ರಿಯೆ ವೇಳೆ ಜಾತಿ ನಿಂದನೆ ಆರೋಪ ಕೇಳಿಬಂದಿರುವ ರಾಜ್ಯದ ಮೊದಲ ಪ್ರಕರಣವೆಂದು ಹೇಳಲಾಗುತ್ತಿದೆ.

