ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಕನಕಪುರಕ್ಕೆ ತೆರಳುವ ಮುನ್ನ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಹಾಗೂ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ, ಅವರೊಂದಿಗೆ ಉಪಾಹಾರ ಸೇವಿಸಿದರು. ಈ ವೇಳೆ ಉಭಯ ನಾಯಕರು ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯಲ್ಲಿ ಯಾವುದೇ ಅಡಚಣೆಗಳು ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶದಿಂದಲೇ ಈ ಸಭೆ ನಡೆದಿದ್ದು, ಎರಡನೇ ಹಂತದ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಕುರಿತು ಸಹ ಸಮಾಲೋಚನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಆ ಪ್ರವಾಸಕ್ಕೂ ಮುನ್ನ ನಡೆದ ಈ ಭೇಟಿ ಮಹತ್ವ ಪಡೆದಿದ್ದು, ಉಭಯ ನಾಯಕರು ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಪಕ್ಷ ಹಾಗೂ ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಪ್ರಾಥಮಿಕ ಮಟ್ಟದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

