ಮೈಸೂರು: ತಿಂಡಿ ತಿನ್ನುವ ವೇಳೆ ಪ್ಯಾಕೆಟ್ನಲ್ಲಿದ್ದ ಪ್ಲಾಸ್ಟಿಕ್ ವಸ್ತುವೊಂದು ಗಂಟಲಿಗೆ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ.
ಗೌರಿಪುರ ಗ್ರಾಮದ ಸಂತೋಷ್ ಮತ್ತು ಐಶ್ವರ್ಯ ದಂಪತಿಯ ಏಕೈಕ ಪುತ್ರ ಮುಕುಂದ್ ಮಯೂರ್ (3) ಮೃತಪಟ್ಟ ಬಾಲಕ.
ಮನೆಯಲ್ಲಿದ್ದ ವೇಳೆ ಮಗು ಕುರುಕುರಿ ತಿನ್ನುತ್ತಿದ್ದು, ಅದರ ಪ್ಯಾಕೆಟ್ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಬಾಲ್ ಅನ್ನು ಗಮನಿಸದೆ ಬಾಯಿಗೆ ಹಾಕಿಕೊಂಡಿದೆ ಎನ್ನಲಾಗಿದೆ.
ಮಗು ಆ ಪ್ಲಾಸ್ಟಿಕ್ ಬಾಲ್ ಅನ್ನು ನುಂಗಿದ ಪರಿಣಾಮ ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಉಸಿರಾಡಲು ಸಾಧ್ಯವಾಗದೆ ಮಗು ತೀವ್ರವಾಗಿ ಒದ್ದಾಡಿದೆ. ಮಗುವಿನ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಪೋಷಕರು ತಕ್ಷಣವೇ ಹುಣಸೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗ ಮಧ್ಯದಲ್ಲೇ ಮಗು ಉಸಿರುಗಟ್ಟಿ ಮೃತಪಟ್ಟಿದೆ. ತಮ್ಮ ಏಕೈಕ ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಕಣ್ಣೀರು ಹಾಕಿದ್ದಾರೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಗೌರಿಪುರ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಮೃತ ಮಗುವಿನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ತಿಂಡಿ ಪ್ಯಾಕೆಟ್ಗಳ ಸುರಕ್ಷತೆ ಬಗ್ಗೆ ಪ್ರಶ್ನೆ
ಈ ದುರ್ಘಟನೆಯ ಬಳಿಕ ಮಕ್ಕಳಿಗಾಗಿ ಮಾರಾಟವಾಗುವ ತಿಂಡಿ ಪ್ಯಾಕೆಟ್ಗಳಲ್ಲಿ ಆಟಿಕೆಗಳು ಅಥವಾ ಪ್ಲಾಸ್ಟಿಕ್ ವಸ್ತುಗಳನ್ನು ಹಾಕುವ ಪದ್ಧತಿ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ಮಕ್ಕಳನ್ನು ಆಕರ್ಷಿಸಲು ಕೆಲವು ಕಂಪನಿಗಳು ಪ್ಯಾಕೆಟ್ಗಳಲ್ಲಿ ವಿವಿಧ ವಸ್ತುಗಳನ್ನು ನೀಡುತ್ತವೆ. ಆದರೆ ಇಂತಹ ವಸ್ತುಗಳು ಮಕ್ಕಳ ಕೈಗೆ ಸಿಕ್ಕಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂತಹ ವಸ್ತುಗಳ ಬಳಕೆಗೆ ಕಠಿಣ ನಿಯಮಗಳನ್ನು ಜಾರಿಗೆ ತರಬೇಕು ಎಂಬ ಆಗ್ರಹ ಕೇಳಿಬಂದಿದೆ.
ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಆಹಾರ ಉತ್ಪನ್ನಗಳ ಪ್ಯಾಕೆಟ್ಗಳಲ್ಲಿ ಯಾವುದೇ ಅಪಾಯಕಾರಿ ವಸ್ತುಗಳು ಇರದಂತೆ ಸಂಬಂಧಪಟ್ಟ ಇಲಾಖೆ ಹಾಗೂ ಕಂಪನಿಗಳು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಘಟನೆ ಪೋಷಕರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಮಕ್ಕಳು ತಿಂಡಿ ತಿನ್ನುವಾಗ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ.

