ಬೆಂಗಳೂರು: ರೈತರನ್ನು ಬೆದರಿಸಿ, ಒತ್ತಾಯಪೂರ್ವಕವಾಗಿ ಸಹಿ ಪಡೆಯುವ ಮೂಲಕ ಭೂಮಿ ಸ್ವಾಧೀನಪಡಿಸಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ಭಾವಿಸಿದ್ದರೆ ಅದು ಸಾಧ್ಯವಿಲ್ಲ. ರೈತರ ಹಿತಾಸಕ್ತಿಯನ್ನು ಕಾಪಾಡಲು ಜೆಡಿಎಸ್ ಹೋರಾಟ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜೆ.ಪಿ. ಭವನದಲ್ಲಿ ಬಿಡದಿ ಪಾದಯಾತ್ರೆಯ ಪೂರ್ವಸಿದ್ಧತಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೌನ್ಶಿಪ್ ಯೋಜನೆ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ ತಕ್ಷಣವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದರು.
ಅದೇ ದಿನ ನಾಲ್ಕು ಗ್ರಾಮಗಳಿಗೆ ಸಂಬಂಧಿಸಿದ ಅಧಿಸೂಚನೆಯೂ ಹೊರಡಿಸಲಾಯಿತು. ಆದರೆ ಸಮಿತಿಯನ್ನು ಏಕೆ ರಚಿಸಲಾಗುತ್ತಿದೆ, ಅದರ ಸದಸ್ಯರು ಯಾರು ಎಂಬ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಆರೋಪಿಸಿದರು.
ಸರ್ಕಾರದ ಈ ನಡೆ ದ್ವಂದ್ವ ನಿಲುವಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಜನರ ಭವಿಷ್ಯದ ಬಗ್ಗೆ ಇಂತಹ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿ ಯಾರಿಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರು. ಶುಭ ದಿನ ಮತ್ತು ಶುಭ ಸಂದರ್ಭದಲ್ಲಿ ರೈತರಿಗೆ ಹಾನಿಯಾಗುವ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದರು.
ಸ್ಥಳೀಯ ಶಾಸಕರು ಇದೀಗ ಸಚಿವರಾಗಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಈಗಾಗಲೇ ಪೂರ್ಣಗೊಳಿಸಿ ನಂತರ ಸಮಿತಿ ರಚಿಸುವುದಾಗಿ ಹೇಳುವುದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನವಾಗಿದೆ ಎಂದು ಅವರು ಟೀಕಿಸಿದರು.
ಬಿಡದಿ ಭಾಗದ ರೈತರ ಪರವಾಗಿ ಜೆಡಿಎಸ್ ಈ ಹಿಂದೆಯೂ 11 ಕಿಲೋಮೀಟರ್ ಪಾದಯಾತ್ರೆ ನಡೆಸಿತ್ತು. ಇದೀಗ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಆಗಸ್ಟ್ 9, 10 ಮತ್ತು 11ರಂದು ಮೂರು ದಿನಗಳ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸುಮಾರು ನಾಲ್ಕು ಸಾವಿರ ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

