ಕೋಲಾರ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ನಡುವೆ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರ ನಡುವೆ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಆರಂಭವಾಗಿದೆ.
ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.
ಶಿವಕುಮಾರ್ ಅವರು ಜೂನ್ 3ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ನಿರೀಕ್ಷೆ ಇದೆ. ಇದರೊಂದಿಗೆ ನೂತನ ಸಚಿವ ಸಂಪುಟ ರಚನೆ ವಿಚಾರವಾಗಿ ರಾಜಕೀಯ ಚರ್ಚೆಗಳು ಜೋರಾಗಿವೆ.
ಈ ನಡುವೆ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲಿ ಸಚಿವ ಸ್ಥಾನ ಪಡೆಯಲು ಲಾಬಿ ತೀವ್ರಗೊಂಡಿದೆ. ಕೆಲವು ಶಾಸಕರು ಈಗಾಗಲೇ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬಂಗಾರಪೇಟೆ ಕ್ಷೇತ್ರದ ಹಿರಿಯ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಹಾಗೂ ಸ್ಥಳೀಯ ಮುಖಂಡರು ಒತ್ತಾಯಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಪ್ರಾರ್ಥನೆಗಳನ್ನು ನಡೆಸಲಾಗಿದೆ.
ಅಷ್ಟೇ ಅಲ್ಲದೆ, ಕೆಲವು ಬೆಂಬಲಿಗರು ದೇವಸ್ಥಾನದ ಮುಂದೆ ಅರೆಬೆತ್ತಲೆಯಾಗಿ ಮಂಡಿಯೂರಿ ಮೆಟ್ಟಿಲುಗಳನ್ನು ಹತ್ತಿ ಸಚಿವ ಸ್ಥಾನ ಸಿಗಲೆಂದು ಪ್ರಾರ್ಥನೆ ಸಲ್ಲಿಸಿರುವ ಘಟನೆ ನಡೆದಿದೆ. ಜೊತೆಗೆ ಉರುಳು ಸೇವೆಯನ್ನೂ ಮಾಡಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ನಾಲ್ಕು ಮಂದಿ ಕಾಂಗ್ರೆಸ್ ಶಾಸಕರಿದ್ದು, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಕೊತ್ತೂರು ಮಂಜುನಾಥ್ ಸೇರಿದಂತೆ ಇತರರು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹಮದ್ ಮತ್ತು ಅನಿಲ್ ಕುಮಾರ್ ಕೂಡ ಬೆಂಬಲ ನೀಡಿದ್ದಾರೆ.
ಇನ್ನು ಕೆಜಿಎಫ್ ಶಾಸಕಿ ರೂಪಕಲಾ ಅವರು ಮಹಿಳಾ ಕೋಟಾದಡಿ ತಮಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಜೊತೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಪುತ್ರಿಯ ಪರವಾಗಿ ಸಚಿವ ಸ್ಥಾನಕ್ಕೆ ಒತ್ತಾಯಿಸುತ್ತಿದ್ದಾರೆ ಎಂಬ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಒಟ್ಟಾರೆ ಕೋಲಾರ ಜಿಲ್ಲೆಯ ರಾಜಕೀಯದಲ್ಲಿ ಸಚಿವ ಸ್ಥಾನ ಯಾರಿಗೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದ್ದು, ಎಲ್ಲರ ಗಮನ ಈಗ ಹೈಕಮಾಂಡ್ ನಿರ್ಧಾರದತ್ತ ನೆಟ್ಟಿದೆ.

