ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡಿರುವ ಹೈಕೋರ್ಟ್, ವಿನಯ್ ಕುಲಕರ್ಣಿ ಸೇರಿದಂತೆ ನಾಲ್ವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ .
ನ್ಯಾಯಮೂರ್ತಿಗಳಾದ ಬಸವರಾಜ್ ಹಾಗೂ ಮೊಹಮ್ಮದ್ ನವಾಜ್ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲು ಸೂಚಿಸಿದೆ .
ತೀರ್ಪಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ ಪರ ವಕೀಲ ಸುನೀಲ್, "ನಾವು ಎರಡು ಅರ್ಜಿಗಳನ್ನು ಸಲ್ಲಿಸಿದ್ದೆವು. ನ್ಯಾಯಾಲಯ ನಮ್ಮ ಅರ್ಜಿಯನ್ನು ಪುರಸ್ಕರಿಸಿದೆ. ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ವಿನಯ್ ಕುಲಕರ್ಣಿ ಪರವಾಗಿ ವಾದ ಮಂಡಿಸಿದ್ದರು. ಪ್ರಕರಣದಲ್ಲಿ ವಿನಯ್ ಕುಲಕರ್ಣಿಯ ಪಾತ್ರವಿಲ್ಲ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಲಾಗಿತ್ತು" ಎಂದು ತಿಳಿಸಿದರು .
ವಿನಯ್ ಕುಲಕರ್ಣಿ ತಕ್ಷಣವೇ ಬಿಡುಗಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯದ ಆದೇಶಕ್ಕೂ ತಡೆಯಾಜ್ಞೆ ನೀಡಿದೆ. ಆದರೆ ಜಾಮೀನು ಆದೇಶದ ದೃಢೀಕೃತ ಪ್ರತಿಯು ಇನ್ನೂ ಲಭ್ಯವಾಗಿಲ್ಲ. ಆದೇಶದ ಪ್ರತಿ ದೊರೆತ ಬಳಿಕ ಕೆಳಹಂತದ ನ್ಯಾಯಾಲಯದಲ್ಲಿ ಅಗತ್ಯ ಅರ್ಜಿ ಸಲ್ಲಿಸಿ ಬಿಡುಗಡೆಯ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು" ಎಂದು ಹೇಳಿದರು .
ಹೈಕೋರ್ಟ್ ಆದೇಶದಿಂದ ವಿನಯ್ ಕುಲಕರ್ಣಿಗೆ ಮಹತ್ವದ ಕಾನೂನುಬದ್ಧ ರಿಲೀಫ್ ದೊರೆತಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳತ್ತ ಇದೀಗ ಎಲ್ಲರ ಗಮನ ನೆಟ್ಟಿದೆ .

