ಮಂಡ್ಯ :- ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಟ್ರ್ಯಾಕ್ಟರ್ ಗಳಲ್ಲಿ ತೆರಳುತ್ತಿದ್ದ ರೈತರನ್ನು ತಡೆದ ಪೋಲೀಸರ ಕ್ರಮಕ್ಕೆ ಶಾಸಕ ಡಿ.ಸಿ.ತಮ್ಮಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 72 ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ರೈತರ ಹೋರಾಟಕ್ಕೆ ಅಡ್ಡಿಪಡಿಸಿದ ಪೋಲೀಸರ ವಿರುದ್ಧ ಹರಿಹಾಯ್ದರು.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ 2 ತಿಂಗಳಿನಿಂದ ರೈತರು ಹೋರಾಟ ನಡೆಸುತ್ತಿದ್ದಾರೆ ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರೊಂದಿಗೆ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಬಗೆಹರಿಸದೆ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಸ್ಯೆ ಬಗ್ಗೆ ಪ್ರತಿಭಟನೆ ನಡೆಸುವ ಹಕ್ಕಿದೆ ಇಂತಹ ಹಕ್ಕನ್ನು ಪೋಲೀಸರ ಬಲ ಪ್ರಯೋಗದ ಮೂಲಕ ಮೊಟಕುಗೊಳಿಸಲು ಮುಂದಾಗಿರುವುದು ನಾಚಿಕೆ ಗೇಡಿನ ಸಂಗತಿ ಎಂದು ರಾಜ್ಯ ಸರ್ಕಾರದ ಗುಡುಗಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ , ಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಿವೆ ಶ್ರೀಮಂತರ ಕೈಗೆ ಕೃಷಿ ಮಾರುಕಟ್ಟೆ ಬಿತ್ತನೆ ಬೀಜದ ಪೆಟೇಂಟ್ ನೀಡಿ ರೈತರನ್ನು ಶೋಷಣೆಗೆ ಒಳಪಡಿಸುವ ಹುನ್ನಾರ ನಡೆದಿದೆ ಎಂದು ಶಾಸಕ ತಮ್ಮಣ್ಣ ಕಿಡಿಕಾರಿದರು.
ವರದಿ , ಗಿರೀಶ್ ರಾಜ್ ಮಂಡ್ಯ.

