ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಸರ್ಕಾರಕ್ಕೆ ಭಾರೀ ಸವಾಲನ್ನು ಎದುರು ಮಾಡಿದ್ದು, ಹೀಗಾಗಿ ಪರಿಸ್ಥಿತಿ ನಿಭಾಯಿಸಲು ಖಾಸಗಿ ಆಸ್ಪತ್ರೆಗಳಿಗೆ ಪ್ರಸ್ತುತ ಸೂಚಿಸಿರುವ ಶೇ.50 ರಷ್ಟು ಹಾಸಿಗೆ ಮೀಸಲಿಡುವುದನ್ನು ಶೇ.80ಕ್ಕೆ ಹೆಚ್ಚಿಸುವಂತೆ ಸೂಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.ಜೊತೆಗೆ ಯಾವುದೇ ಕ್ಷಣದಲ್ಲಿ ಆಮ್ಲಜನಕದ ಕೊರತೆಯನ್ನು ತನ್ನ ಗಮನಕ್ಕೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಮತ್ತು ಹಾಸಿಗೆಗಳ ದಾಸ್ತಾನು ವಿವರಗಳನ್ನು ಮುಖ್ಯಮಂತ್ರಿಗಳು ಸಂಗ್ರಹಿಸಿದರು ಮತ್ತು ಯಾವುದೇ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಅಥವಾ ಆಮ್ಲಜನಕದ ಕೊರತೆ ಇದ್ದಲ್ಲಿ ಅದನ್ನು ಅವರ ಗಮನಕ್ಕೆ ತರಬೇಕು ಎಂದು ಸೂಚನೆ ಕೊಟ್ಟಿದ್ದಾರೆ.
ಈ ಕುರಿತು ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.ಬೆಂಗಳೂರಿನಲ್ಲಿ ವೆಂಟಿಲೇಟರ್ ಲಭ್ಯತೆಯನ್ನು 10 ರಟ್ಟು ಹೆಚ್ಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.ಬೆಂಗಳೂರಿನಲ್ಲಿ ಆಮ್ಲಜನಕ ಹಾಸಿಗೆ, ಐಸಿಯು ಹಾಸಿಗೆ, ವೆಂಟಿಲೇಟರ್ ಕೊರತೆಯಾಗುತ್ತಿದೆ. 15 ದಿನದಲ್ಲಿ ಕನಿಷ್ಟ ಎರಡು ಸಾವಿರ ಐಸಿಯು ಹಾಸಿಗೆಯ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗುವುದು. ಎರಡು ಸಾವಿರ ಪೈಕಿ 800ಕ್ಕೆ ವೆಂಟಿಲೇಟರ್ ಅಳವಡಿಕೆಯಾಗಲಿದೆ.
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿಯೇ ಮೇಕ್ ಶಿಫ್ಟ್ ನಲ್ಲಿ 250 ಹಾಸಿಗೆಯ ಐಸಿಯು, ಮತ್ತೊಂದು ಹೊಸ ಕಟ್ಟಡದಲ್ಲಿ 150-200 ಹಾಸಿಗೆಯ ಐಸಿಯು ಮಾಡಲಾಗುತ್ತಿದೆ. 250 ಹಾಸಿಗೆಯ ಐಸಿಯುವಿನಲ್ಲಿ 100ಕ್ಕೆ ವೆಂಟಿಲೇಟರ್ ಅಳವಡಿಸಲಾಗುತ್ತದೆ.
#ಡಿ.ಸಿ.ಗಳಿಗೆ ಖಡಕ್ ಸೂಚನೆ
ಯಾವುದೇ ಕಾರಣಕ್ಕೂ ಆಕ್ಸಿಜನ್ ಸರಬರಾಜು ಜಾಲದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಬೇಕು, ಜೊತೆಗೆ ಯಾವುದೇ ತಕ್ಷಣದ ಅಗತ್ಯತೆ ಕಂಡು ಬಂದರೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಅಥವಾ ತಮ್ಮ ಗಮನಕ್ಕೆ ಕೂಡಲೇ ತರಬೇಕು ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಹಾಸಿಗೆ ಮತ್ತು ಆಕ್ಸಿಜನ್ ಬಗ್ಗೆ ಮಾಹಿತಿ ಪಡೆದರು. ಆಕ್ಸಿಜನ್, ರೆಮಿಡಿಸಿವರ್ ನಲ್ಲಿ ಕೊರತೆ ಕಂಡುಬಂದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ಅಥವಾ ತಮ್ಮ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.
ಯಾವುದೇ ಕಾರಣಕ್ಕೂ ಆಕ್ಸಿಜನ್ ಸರಬರಾಜು ಜಾಲದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಬೇಕು, ಜೊತೆಗೆ ಯಾವುದೇ ತಕ್ಷಣದ ಅಗತ್ಯತೆ ಕಂಡು ಬಂದರೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಅಥವಾ ತಮ್ಮ ಗಮನಕ್ಕೆ ಕೂಡಲೇ ತರಬೇಕು ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದು
ಬಂದಿದೆ.

