Dailyhunt Logo
  • Light mode
    Follow system
    Dark mode
    • Play Story
    • App Story
ಮತದಾರರ ಪಟ್ಟಿ ಲೋಪಗಳನ್ನು ಪ್ರಶ್ನಿಸುವುದು ನನ್ನ ಕರ್ತವ್ಯ: ಬೊಮ್ಮಾಯಿ

ಮತದಾರರ ಪಟ್ಟಿ ಲೋಪಗಳನ್ನು ಪ್ರಶ್ನಿಸುವುದು ನನ್ನ ಕರ್ತವ್ಯ: ಬೊಮ್ಮಾಯಿ

ಹಾವೇರಿ, 05 ಜುಲೈ (ಹಿ.ಸ.):

ಆಯಂಕರ್:

ತದಾರರ ಪಟ್ಟಿಯಲ್ಲಿ ಕಂಡುಬಂದಿರುವ ಲೋಪದೋಷಗಳನ್ನು ಜನರ ಗಮನಕ್ಕೆ ತರುವುದು ಮತ್ತು ಅದನ್ನು ಸರಿಪಡಿಸುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸುವುದು ಒಬ್ಬ ಜನಪ್ರತಿನಿಧಿಯಾಗಿ ನನ್ನ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿಯಲ್ಲಿ ​ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶಾಸಕ ಎಚ್.ಕೆ. ಪಾಟೀಲ್ ಅವರ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ​​ಗದಗ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಎಚ್.ಕೆ. ಪಾಟೀಲ್ ಎಂಬ ಹೆಸರು ಮೂರು ಕಡೆ ನಮೂದಾಗಿದೆ ಎಂದು ನಾನು ನಿನ್ನೆ ಹೇಳಿದ್ದೆ. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಇದನ್ನು ಪರಿಶೀಲಿಸಬೇಕು ಎಂದು ಕೋರಿದ್ದೆ. ಕೇವಲ ಅವರ ಹೆಸರಷ್ಟೇ ಅಲ್ಲದೇ, ಗದಗದಲ್ಲಿ ಇಂತಹ ಸುಮಾರು 3,000ಕ್ಕೂ ಹೆಚ್ಚು ಹೆಸರುಗಳು ಎರಡು, ಮೂರು ಅಥವಾ ನಾಲ್ಕು ಕಡೆ ಇವೆ. ಇದರ ಪಟ್ಟಿಯನ್ನೂ ಸಹ ನಾವು ನೀಡಿದ್ದೇವೆ ಮತ್ತು ಇದನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದೇವೆ ಎಂದು ಬೊಮ್ಮಾಯಿ ವಿವರಿಸಿದರು.

*​ಹೆಚ್.ಕೆ. ಪಾಟೀಲ್ ಹೇಳಿಕೆಗೆ ಆಕ್ಷೇಪ:*

​ನನ್ನ ಹೇಳಿಕೆಗೆ ಎಚ್.ಕೆ. ಪಾಟೀಲ್ ಅವರು ಪ್ರತಿಕ್ರಿಯಿಸಿ, ಇದನ್ನು ಕೀಳುಮಟ್ಟದ ರಾಜಕಾರಣ ಎಂದು ಕರೆದಿದ್ದಾರೆ. ಆದರೆ ನಾನು ಯಾವುದೇ ರಾಜಕೀಯ ಮಾತನಾಡಿಲ್ಲ. ಮ್ಯಾಪಿಂಗ್ ಮಾಡಿದಾಗ ಕಂಡುಬಂದ ಲೋಪಗಳನ್ನು ಮಾತ್ರ ಪ್ರಸ್ತಾಪಿಸಿದ್ದೇನೆ. ನಮ್ಮ ಕಡೆಯಿಂದ ಯಾವುದೇ ಆಪಾದನೆಯನ್ನು ಮಾಡಿಲ್ಲ. ಆದರೆ, ತಮ್ಮ ಬಗ್ಗೆ ಮಾತನಾಡಿದ್ದೇ ಕೀಳುಮಟ್ಟದ ರಾಜಕೀಯ ಎನ್ನುವ ಅವರ ಧೋರಣೆ ಸರಿಯಲ್ಲ ಮತ್ತು ಸಮಂಜಸವೂ ಅಲ್ಲ. ಅವರು ತಮ್ಮ ಈ ಮಾತನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

*​ಚುನಾವಣಾ ಆಯೋಗವೇ ಸ್ಪಷ್ಟನೆ ನೀಡಲಿ:*

​ಮತದಾರರ ಪಟ್ಟಿಯ ಈ ಲೋಪಗಳಿಗೆ ಚುನಾವಣಾ ಆಯೋಗದ ಅಧಿಕಾರಿಗಳೇ ಸೂಕ್ತ ಸ್ಪಷ್ಟನೆ ನೀಡಬೇಕಾಗಿದೆ. ಪಟ್ಟಿಯನ್ನು ಸರಿಪಡಿಸಬೇಕು ಎಂಬ ನಮ್ಮ ಆಗ್ರಹ ಈಗಲೂ ಇದೆ. ಒಬ್ಬ ಜನಪ್ರತಿನಿಧಿಯಾಗಿ ಯಾವುದೇ ಒತ್ತಡಕ್ಕೆ ಮಣಿಯದೇ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ. ಇದರಲ್ಲಿ ಕ್ಷಮಾಪಣೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

​ಲೋಪಗಳಿಗೆ ಸೂಕ್ತ ಸ್ಪಷ್ಟನೆ ನೀಡುವುದನ್ನು ಬಿಟ್ಟು ಈ ರೀತಿ ಮಾತನಾಡುತ್ತಿರುವುದನ್ನು ನೋಡಿದರೆ ಅವರ ರಾಜಕಾರಣವೇ ಕೀಳುಮಟ್ಟಕ್ಕೆ ಹೋಗಿದೆ ಎಂದು ಅನಿಸುತ್ತದೆ. ಈ ಇಡೀ ವಿಚಾರದಲ್ಲಿ ಚುನಾವಣಾ ಆಯೋಗವು ಶೀಘ್ರದಲ್ಲೇ ಸ್ಪಷ್ಟನೆ ನೀಡುವುದು ಸೂಕ್ತ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada