ಬೆಂಗಳೂರು, 31 ಜುಲೈ (ಹಿ.ಸ.):
ಆಯಂಕರ್:
ರಾಜ್ಯದಲ್ಲಿ ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರವು ಆಡಳಿತ ವೈಫಲ್ಯಗಳನ್ನು ಸರಿಪಡಿಸುವ ಬದಲು ಪ್ರತಿಪಕ್ಷ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಮೂಲಕ ಟೀಕೆಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.
ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಳಿಕ ಇದೀಗ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧವೂ ಎಫ್ಐಆರ್ ದಾಖಲಿಸಿರುವುದು ರಾಜಕೀಯ ಪ್ರೇರಿತ ಕ್ರಮ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರು ಹಾಗೂ ಗ್ರಾಮೀಣ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬರ ನಿರ್ವಹಣೆಗೆ ಆದ್ಯತೆ ನೀಡುವ ಬದಲು ಅಧಿಕಾರದ ಲೆಕ್ಕಾಚಾರ ಮತ್ತು ಸಚಿವ ಸ್ಥಾನಗಳ ರಾಜಕೀಯದಲ್ಲೇ ಸರ್ಕಾರ ತೊಡಗಿರುವುದು ದುರದೃಷ್ಟಕರ ಎಂದು ಟೀಕಿಸಿದ್ದಾರೆ.
ಕಾನೂನು ಮತ್ತು ಪೊಲೀಸ್ ವ್ಯವಸ್ಥೆಯನ್ನು ರಾಜಕೀಯ ಸೇಡಿನ ಸಾಧನವನ್ನಾಗಿ ಬಳಸುವುದು ಪ್ರಜಾಪ್ರಭುತ್ವದ ಆರೋಗ್ಯಕರ ಪರಂಪರೆಗೆ ಒಳ್ಳೆಯದಲ್ಲ. ಸರ್ಕಾರವು ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಬಿಟ್ಟು, ಬರಪೀಡಿತ ಜನರ ಸಂಕಷ್ಟಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.

