ನವದೆಹಲಿ, ಜುಲೈ 31(ಹಿ.ಸ.):
ಆಯಂಕರ್:
ಪ್ರತಿಪಕ್ಷ ಸದಸ್ಯರ ನಿರಂತರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ರಾಜ್ಯಸಭೆಯ ಕಲಾಪವನ್ನು ಆಗಸ್ಟ್ 3 ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಯಿತು.
ಕಲಾಪ ಆರಂಭವಾಗುತ್ತಿದ್ದಂತೆ ಅಗತ್ಯ ದಾಖಲೆಗಳನ್ನು ಸದನದ ಪೀಠದ ಮೇಲೆ ಮಂಡಿಸಲಾಯಿತು.
ಬಳಿಕ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ವಿಪಕ್ಷ ಸದಸ್ಯರು ಒತ್ತಾಯಿಸಿದರು. ಸಭಾಪತಿ ಸಿ.ಪಿ. ರಾಧಾಕೃಷ್ಣನ್ ನಂತರ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರೂ, ನಿಯಮ 267ರ ಅಡಿಯಲ್ಲಿ ಸಲ್ಲಿಸಲಾದ ಯಾವುದೇ ನೋಟಿಸ್ಗಳನ್ನು ಅಂಗೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ಸದಸ್ಯರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ರಾಮಮಂದಿರದ ಕಾಣಿಕೆ ಕಳ್ಳತನದ ಆರೋಪ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟು ಘೋಷಣೆ ಕೂಗಲು ಆರಂಭಿಸಿದರು. ನಿರಂತರ ಗದ್ದಲದಿಂದ ಸದನದ ಕಲಾಪ ಸುಗಮವಾಗಿ ನಡೆಯಲಿಲ್ಲ.
ಈ ವೇಳೆ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ವಿಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ವಿಪಕ್ಷವು ಸದನದಲ್ಲಿ ಬೀದಿ ರಾಜಕೀಯ ಮಾಡುತ್ತಿದೆ. ಸರ್ಕಾರದ ಸಚಿವರು ಸದನದಲ್ಲಿದ್ದರೂ, ವಿಪಕ್ಷವು ಸದನದ ಘನತೆಗೆ ಧಕ್ಕೆ ತರುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದು, ಕೇವಲ ಗೊಂದಲ ಸೃಷ್ಟಿಸುವುದೇ ಅವರ ಉದ್ದೇಶವಾಗಿದೆ. ಜನರ ಸಮಸ್ಯೆಗಳ ಬಗ್ಗೆ ವಿಪಕ್ಷಕ್ಕೆ ಕಾಳಜಿ ಇಲ್ಲ ದೇಶದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ವಿಪಕ್ಷದ ಸದಸ್ಯರ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಸಭಾಪತಿ ರಾಜ್ಯಸಭೆಯ ಕಲಾಪವನ್ನು ಮುಂದೂಡಿ, ಮುಂದಿನ ಸಭೆಯನ್ನು ಆಗಸ್ಟ್ 3ರಂದು ಬೆಳಿಗ್ಗೆ 11 ಗಂಟೆಗೆ ನಡೆಸುವುದಾಗಿ ಘೋಷಿಸಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.

