Dailyhunt
ಸಚಿವ ಸ್ಥಾನಕ್ಕೆ ನಾಡಗೌಡರ ಹೆಸರೇ ಅಂತಿಮ ಆಗಲಿ : ಎನ್.ಎಸ್.ಯು.ಐ ಆಗ್ರಹ

ಸಚಿವ ಸ್ಥಾನಕ್ಕೆ ನಾಡಗೌಡರ ಹೆಸರೇ ಅಂತಿಮ ಆಗಲಿ : ಎನ್.ಎಸ್.ಯು.ಐ ಆಗ್ರಹ

ವಿಜಯಪುರ, 07 ಮೇ (ಹಿ.ಸ.) :

ಆಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಜೋರಾಗಿರುವ ಬೆನ್ನಲ್ಲೇ ವಿಜಯಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಮಾಜಿ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಆದ ಎಂ.ಬಿ. ಪಾಟೀಲ ಅವರ ಆಪ್ತ ನಾಯಕ 'ಅಪ್ಪಾಜಿ' ಎಂದೇ ಗುರುತಿಸಿಕೊಂಡಿರುವ ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ಗಟ್ಟಿಯಾಗುತ್ತಿದೆ.

ಈ ಕುರಿತು ಎನ್.ಎಸ್.ಯು.ಐ ಮುಖಂಡ ಸದ್ದಾಂ ಕುಂಟೋಜಿ ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವಲ್ಲಿ, ಕಾರ್ಯಕರ್ತರನ್ನು ಒಂದೆಡೆ ಸೇರಿಸುವಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಪರ ಜನಾಭಿಪ್ರಾಯ ರೂಪಿಸುವಲ್ಲಿ ನಾಡಗೌಡರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ನಾಡಗೌಡರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತ್ತಿದ್ದು, ಯಾವುದೇ ಹುದ್ದೆ ನಿರೀಕ್ಷಿಸದೇ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಇಂತಹ ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದ್ದು, ಇದರಿಂದ ವಿಜಯಪುರ ಜಿಲ್ಲೆಗೆ ಮತ್ತಷ್ಟು ಬಲ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ರಾಜಕೀಯ ಅನುಭವ, ಜನಸಂಪರ್ಕ ಹಾಗೂ ಆಡಳಿತ ಸಾಮರ್ಥ್ಯ ಹೊಂದಿರುವ ನಾಡಗೌಡರು ಸಚಿವರಾದರೆ ಜಿಲ್ಲೆಯ ಅಭಿವೃದ್ಧಿಗೆ ವೇಗ ಸಿಗಲಿದೆ. ರೈತರು, ಯುವಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಅವರು ನಾಡಗೌಡರ ಹೆಸರನ್ನೇ ಅಂತಿಮಗೊಳಿಸಬೇಕು ಎಂದು ಸದ್ದಾಂ ಕುಂಟೋಜಿ ಆಗ್ರಹಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭದ್ರ ನೆಲೆ ನಿರ್ಮಿಸಲು ನಾಡಗೌಡರ ಪಾತ್ರ ದೊಡ್ಡದಾಗಿದೆ. ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಅವರಂತಹ ಅನುಭವಿ ನಾಯಕರಿಗೆ ಸಚಿವ ಸ್ಥಾನ ನೀಡುವುದು ಅವಶ್ಯಕವಾಗಿದೆ ಎಂದು ಎನ್.ಎಸ್.ಯು.ಐ ಕಾರ್ಯಕರ್ತರು ಸಹ ಒತ್ತಾಯ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಕುರಿತ ರಾಜಕೀಯ ಚಟುವಟಿಕೆಗಳು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿ, ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಾಡಗೌಡರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ನಿರೀಕ್ಷೆ ಹೆಚ್ಚಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada