ಬಾಗಲಕೋಟೆ, 05 ಆಗಸ್ಟ್ (ಹಿ.ಸ.)
ಆಯಂಕರ್ : ತಮ್ಮ ವಿರುದ್ಧ ಸ್ವಪಕ್ಷದವರಿಂದಲೇ ರಾಜಕೀಯ ಕುತಂತ್ರ ನಡೆಯುತ್ತಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ್ ಗಂಭೀರ ಆರೋಪ ಮಾಡಿದರು. ವಿರೋಧ ಪಕ್ಷಗಳಿಗೆ ತಮ್ಮ ವಿರುದ್ಧ ರಾಜಕೀಯವಾಗಿ ಎದುರಿಸಲು ಶಕ್ತಿ ಇಲ್ಲದ ಕಾರಣ, ಕೆಲವರು ಪಕ್ಷದೊಳಗೇ ಅಪಪ್ರಚಾರ ಮತ್ತು ಷಡ್ಯಂತ್ರದ ರಾಜಕಾರಣ ನಡೆಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲವರು ಪಕ್ಷದೊಳಗೇ ಗೊಂದಲದ ವಾತಾವರಣ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇಂತಹ ಕುತಂತ್ರಗಳಿಗೆ ತಾವು ಎಂದಿಗೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ವಿರುದ್ಧ ಯಾರು ಏನೇ ಪ್ರಯತ್ನ ಮಾಡಿದರೂ ಜನರ ಆಶೀರ್ವಾದ ಮತ್ತು ಪಕ್ಷದ ಹಿರಿಯ ನಾಯಕರ ವಿಶ್ವಾಸ ನನ್ನೊಂದಿಗಿದೆ. ವಿರೋಧ ಪಕ್ಷಗಳಿಗೆ ನನ್ನ ವಿರುದ್ಧ ನೇರವಾಗಿ ಹೋರಾಡುವ ಶಕ್ತಿ ಇಲ್ಲ.
ಆದ್ದರಿಂದ ಕೆಲವು ಸ್ವಪಕ್ಷದವರನ್ನೇ ಮುಂದಿಟ್ಟು ರಾಜಕೀಯ ಆಟ ಆಡಿಸಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಂಜಯ್ಯಮಠ ವಿರುದ್ಧವೂ ಸಚಿವರು ತೀವ್ರ ವಾಗ್ದಾಳಿ ನಡೆಸಿದರು. ಪಕ್ಷ ವಿರೋಧಿ ಕೆಲಸ ಮಾಡುವವರಿಗೆ ನಮ್ಮ ನಾಯಕರು ಹಾಗೂ ಪಕ್ಷದ ಹೈಕಮಾಂಡ್ ಸೂಕ್ತ ರೀತಿಯಲ್ಲಿ ನೋಡಿಕೊಳ್ಳುತ್ತದೆ. ಪಕ್ಷದ ಶಿಸ್ತು ಮೀರಿದವರ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರ ಪಕ್ಷದ ನಾಯಕರಿಗಿದೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ರಾಜ್ಯ ಕಾಂಗ್ರೆಸ್ ನಾಯಕತ್ವದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ ಅವರು, ಮುಖ್ಯಮಂತ್ರಿ ಮಾಜಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande

