




ಬಳ್ಳಾರಿ, 11 ಏಪ್ರಿಲ್ (ಹಿ.ಸ): ಆಯಂಕರ್ :
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ಮಂಗಳವಾರ ನಡೆಯಲಿದ್ದು ಬಳ್ಳಾರಿಯ ಸಮಾಜ ಸೇವಕ, ಹಿರಿಯ ವಕೀಲ ಎನ್.
ತಿಪ್ಪಣ್ಣ, ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಮತ್ತು ಹೊಸಪೇಟೆಯ ಉದ್ಯಮಿ ನರೇಂದ್ರ ಕುಮಾರ್ ಬಲ್ಡೋಟ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿದ್ದು.ಪಿ. ಆಲಗೂರ ಅವರು ತಿಳಿಸಿದ್ದಾರೆ.
ಏಪ್ರಿಲ್ 12ರ ಮಂಗಳವಾರ ಬೆಳಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರ ಆವರಣದಲ್ಲಿ ಘಟಿಕೋತ್ಸವ ಪ್ರಾರಂಭವಾಗಲಿದೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆವಹಿಸಲಿದ್ದಾರೆ. ಕುರುಕ್ಷೇತ್ರ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೈಲಾಶ್ ಚಂದ್ರ ಶರ್ಮ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ.
ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕುಲಸಚಿವ ಪ್ರೊ. ಎಸ್. ಸಿ. ಪಾಟೀಲ್ ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ್ ಒ. ಓಲೇಕಾರ ಅವರು ವೇದಿಕೆಯಲ್ಲಿ ಇರಲಿದ್ದಾರೆ.
ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 51 ಚಿನ್ನದ ಪದಕಗಳನ್ನು 42 ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 26 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲಾ ವಿಭಾಗಗಳ ಸ್ನಾತಕ ಪದವಿಯ 61 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯ 57 ವಿದ್ಯಾರ್ಥಿಗಳು ಸೇರಿ ಒಟ್ಟು 118 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಸ್ವೀಕರಿಸಲಿದ್ದಾರೆ.
ಔದ್ಯೋಗಿಕ ರಸಾಯನ ಶಾಸ್ತ್ರದಲ್ಲಿ ಸುಪ್ರಿಯ, ಖನಿಜ ಸಂಸ್ಕರಣದಲ್ಲಿ ಉಸ್ಥಲಮುರಿ ಸುರೇಂದ್ರ, ವಾಣಿಜ್ಯ ಶಾಸ್ತ್ರದಲ್ಲಿ ಎ.ಜಿ. ಶ್ರೀನಾಗೇಶ್ ಅವರಿಗೆ ತಲಾ ಮೂರು ಚಿನ್ನದ ಪದಕಗಳು ಸಂದಿವೆ. ಭೌತಶಾಸ್ತ್ರದಲ್ಲಿ ಯು. ರೇಣುಕಾ, ರಸಾಯನ ಶಾಸ್ತ್ರದಲ್ಲಿ ಕೆ.ಎಂ. ಅರ್ಚನ ಮತ್ತು ಸಮಾಜಕಾರ್ಯದಲ್ಲಿ ಎ. ಪ್ರಸನ್ನಕುಮಾರ್ ಅವರು ತಲಾ 2 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಒಟ್ಟು 11,828 ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು ತಮ್ಮ ಕೋರ್ಸ್ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿ ವಿಭಾಗದಲ್ಲಿ 2060 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.
