Dailyhunt Logo
  • Light mode
    Follow system
    Dark mode
    • Play Story
    • App Story
ಯುವಕರಿಗೆ ಉಚಿತ ತರಬೇತಿ, ಊಟ, ವಸತಿ ಹಾಗೂ ಪರವಾನಿಗೆ ಸೌಲಭ್ಯ

ಯುವಕರಿಗೆ ಉಚಿತ ತರಬೇತಿ, ಊಟ, ವಸತಿ ಹಾಗೂ ಪರವಾನಿಗೆ ಸೌಲಭ್ಯ

ಗದಗ, 01 ಜೂನ್ (ಹಿ.ಸ.) :

ಯಂಕರ್ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದ್ದು, ಎಸ್ಸಿ.ಎಸ್ಪಿ ಹಾಗೂ ಟಿಎಸ್ಪಿ ಯೋಜನೆಯಡಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲು ಮುಂದಾಗಿದೆ.

ಕರ್ನಾಟಕ ಸರ್ಕಾರದ ಯೋಜನೆಯಡಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾ) ವತಿಯಿಂದ ಹುಬ್ಬಳ್ಳಿ ಹಾಗೂ ಶಿಗ್ಗಾವಿ ತರಬೇತಿ ಕೇಂದ್ರಗಳಲ್ಲಿ ಈ ವಿಶೇಷ ತರಬೇತಿ ಕಾರ್ಯಕ್ರಮ ಆರಂಭಗೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕ-ಯುವತಿಯರು ಈ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ತರಬೇತಿ ಕಾರ್ಯಕ್ರಮವು ಸುಮಾರು 30 ದಿನಗಳ ಅವಧಿಯದ್ದಾಗಿದ್ದು, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಲಘು ಮತ್ತು ಭಾರಿ ವಾಹನ ಚಾಲನೆಗೆ ಸಂಬಂಧಿಸಿದಂತೆ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿಯನ್ನು ನೀಡಲಾಗುತ್ತದೆ. ಕೇವಲ ವಾಹನ ಚಾಲನೆಯಷ್ಟೇ ಅಲ್ಲದೆ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು, ವಾಹನ ನಿರ್ವಹಣೆ ಹಾಗೂ ಜವಾಬ್ದಾರಿಯುತ ಚಾಲನೆ ಕುರಿತಾದ ಮಾಹಿತಿ ನೀಡುವ ಮೂಲಕ ಉದ್ಯೋಗಕ್ಕೆ ಅಗತ್ಯ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗುತ್ತದೆ.

ಇನ್ನೂ ವಿಶೇಷವಾಗಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಊಟ, ಉಪಹಾರ ಹಾಗೂ ವಸತಿ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೇ ತರಬೇತಿ ಪಡೆಯಲು ಸರ್ಕಾರ ಈ ಸೌಲಭ್ಯಗಳನ್ನು ಒದಗಿಸಿದೆ.

ಇದರೊಂದಿಗೆ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ವಾಹನ ಚಾಲನಾ ಪರವಾನಿಗೆ ಪತ್ರ (ಡ್ರೈವಿಂಗ್ ಲೈಸೆನ್ಸ್) ಪಡೆಯಲು ಅಗತ್ಯ ವ್ಯವಸ್ಥೆಯನ್ನೂ ಮಾಡಿಕೊಡಲಾಗುತ್ತಿದೆ. ಇದರಿಂದ ತರಬೇತಿ ಪಡೆದ ಯುವಕರು ಖಾಸಗಿ ಹಾಗೂ ಸರ್ಕಾರಿ ವಲಯದಲ್ಲಿ ಚಾಲಕರಾಗಿ ಉದ್ಯೋಗ ಪಡೆಯಲು ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೌಶಲ್ಯಾಧಾರಿತ ತರಬೇತಿಗಳು ಯುವಜನತೆಗೆ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರು ಮತ್ತು ಯುವತಿಯರು ಸರ್ಕಾರದ ಈ ಮಹತ್ವದ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ, ಹುಬ್ಬಳ್ಳಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada