ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದು, ನ್ಯಾಯಾಲಯವನ್ನು ರಾಜಕೀಯ ಉದ್ದೇಶಗಳಿಗೆ ಬಳಸಬಾರದು ಎಂದು ಪಕ್ಷಕ್ಕೆ ತೀವ್ರ ಎಚ್ಚರಿಕೆ ನೀಡಿದೆ.
ಪ್ರಕರಣದ ತನಿಖೆ ಈಗಾಗಲೇ ಸಿಬಿಐಗೆ ವಹಿಸಲಾಗಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
CBI ತನಿಖೆ ನಡೆಯುತ್ತಿದೆ
ಪ್ರಕರಣದ ತನಿಖೆ ಸಿಬಿಐ ನಡೆಸುತ್ತಿರುವಾಗ ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅರ್ಜಿಯ ವಿಚಾರಣೆಯನ್ನು ಮುಂದುವರಿಸಿದರೆ ಅದನ್ನು ವಜಾಗೊಳಿಸಬೇಕಾಗಬಹುದು ಎಂದು ಡಿಎಂಕೆ ಪರ ವಕೀಲರಿಗೆ ನ್ಯಾಯಪೀಠ ಸೂಚಿಸಿದೆ.
ತೈಲ ಮಾರುಕಟ್ಟೆಯಲ್ಲಿ ಹಲ್ ಚಲ್: 26 ವರ್ಷಗಳಲ್ಲೇ ಗರಿಷ್ಟ ತೈಲ ಬೆಲೆ ಇಳಿಕೆ ಮಾಡಿದ ಸೌದಿ
ಡಿಎಂಕೆ ಆರೋಪವೇನು?
ಟಿವಿಕೆ ಪಕ್ಷದ ನಾಯಕರು ಹಾಗೂ ಸಚಿವರು ಪ್ರಕರಣದ ಕುರಿತು ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಿರುವುದು ತನಿಖೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಡಿಎಂಕೆ ಆರೋಪಿಸಿತ್ತು. ಮುಖ್ಯಮಂತ್ರಿ ಹಾಗೂ ಸಚಿವರು ಈ ಪ್ರಕರಣದ ಬಗ್ಗೆ ಮಾತನಾಡದಂತೆ ನಿರ್ದೇಶನ ನೀಡುವಂತೆ ಕೋರ್ಟ್ಗೆ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, "ರಾಜಕೀಯ ಹೇಳಿಕೆಗಳಿಗೆ ರಾಜಕೀಯ ವೇದಿಕೆಯಲ್ಲೇ ಉತ್ತರ ನೀಡಿ, ನ್ಯಾಯಾಲಯವನ್ನು ರಾಜಕೀಯ ವೇದಿಕೆಯನ್ನಾಗಿ ಮಾಡಬೇಡಿ" ಎಂದು ಖಡಕ್ವಾಗಿ ಹೇಳಿದ್ದಾರೆ.
ಏನಿದು ಕರೂರ್ ದುರಂತ?
2025ರ ಸೆಪ್ಟೆಂಬರ್ನಲ್ಲಿ ಕರೂರ್ನಲ್ಲಿ ನಡೆದ ಟಿವಿಕೆ ಪಕ್ಷದ ಭಾರಿ ರ್ಯಾಲಿಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 39 ಮಂದಿ ಮೃತಪಟ್ಟಿದ್ದರು. ಈ ಘಟನೆ ರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಬಳಿಕ ಸುಪ್ರೀಂ ಕೋರ್ಟ್ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

