ಬೆಂಗಳೂರು : ರಾಜ್ಯ ಸರ್ಕಾರವು ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್ ಟ್ಯಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಸೇವೆ ಒದಗಿಸುವ ಸಂಬಂಧ ಕಂಪನಿಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಇಂಟರ್ನೆಟ್ ಪೂರೈಕೆದಾರ ಸಂಸ್ಥೆಗಳ ಪ್ರತಿನಿಧಿಗಳ ಜತೆ ವಿಡಿಯೊ ಸಂವಾದ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲ್ಯಾಪ್ಟಾಪ್ ಕೊಟ್ಟ ನಂತರ ಅವುಗಳ ಸದುಪಯೋಗ ಸರಿಯಾಗಿ ಆಗುತ್ತಿಲ್ಲ. ಈ ಕಾರಣಕ್ಕೆ ಇಂಟರ್ನೆಟ್ ಸೇವೆ ಒದಗಿಸುವಂತೆ ಕೋರಲಾಗಿದೆ. ಇದಕ್ಕೆ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಮಾಹಿತಿ ಒದಗಿಸುವಂತೆ ಕೋರಿವೆ.
ಲ್ಯಾಪ್ ಟಾಪ್ ಇಲ್ಲದವರಿಗೆ ಆನ್ ಲೈನ್ ಶಿಕ್ಷಣ ಪಡೆಯಲು ತೊಂದರೆಯಾಗುತ್ತಿದೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಲ್ಯಾಪ್ ಟಾಪ್ ಹೊಂದಿರುವವರು ಅದನ್ನು ಸದ್ಬಳಕೆ ಮಾಡಿಕೊಳ್ಳಲು ಬೇಕಾದ ಸೌಲಭ್ಯ ಒದಗಿಸುವುದು ನಮ್ಮ ಗುರಿ. ಲ್ಯಾಪ್ ಟಾಪ್ ಇಲ್ಲದೇ ಇರುವವರಿಗೆ ಏನು ಎಂಬುದನ್ನು ಮುಂದೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಪ್ರಥಮ ವರ್ಷದ 1.10 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವರು ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡಲಿದ್ದಾರೆ. ಇವರಿಗೆ ಸಾಮಾನ್ಯ ತರಗತಿ ಜತೆಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡುವ, ತರಬೇತಿ ಒದಗಿಸುವ ಬಗ್ಗೆಯು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಆರಂಭವಾದರೂ ಇಂಟರ್ ನೆಟ್ ಸಮಸ್ಯೆ ಇದೆ. ಇದರ ಜತೆಗೆ ಸಾಕಷ್ಟು ವಿದ್ಯಾರ್ಥಿಗಳಲ್ಲಿ ಲ್ಯಾಪ್ ಟಾಪ್ ಕೂಡ ಇಲ್ಲ. ಈ ರೀತಿಯ ಸಮಸ್ಯೆ, ಸವಾಲುಗಳು ಬಂದಾಗ ಅದನ್ನು ಬಗೆಹರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಕೊವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ಅನಿಯಂತ್ರಿತ ಇಂಟರ್ ನೆಟ್ ಮತ್ತು ವಿದ್ಯುತ್ ಪೂರೈಕೆ ಮಾಡುವ ಮೂಲಕ ನಮ್ಮ ಸರ್ಕಾರ ಸೈ ಎನಿಸಿಕೊಂಡಿದ್ದು, ಅದೇ ಮಾದರಿಯಲ್ಲಿ ಈ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now