ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣ ಮತ್ತು ನಂತರ ವಿಶೇಷ ತನಿಖಾ ದಳ(ಎಸ್ಐಟಿ) ಸಲ್ಲಿಸಿದ ಆರೋಪ ಪಟ್ಟಿಯನ್ನು ವಜಾಗೊಳಿಸುವಂತೆ ಕೋರಿದ ಅರ್ಜಿಯನ್ನು ಜೆಡಿಎಸ್ ಶಾಸಕ ಹೆಚ್.ಡಿ.
ರೇವಣ್ಣ ಹಿಂಪಡೆದುಕೊಂಡಿದ್ದಾರೆ.
ರೇವಣ್ಣ ಪರ ವಕೀಲ ಬಿ.ಎಂ. ಗಿರೀಶ್ ಕುಮಾರ್ ಅವರು ಸಲ್ಲಿಸಿದ್ದ ಮೆಮೊ ದಾಖಲಿಸಿಕೊಂಡ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ. ಕಾನೂನಿನ ಅನ್ವಯ ಆಕ್ಷೇಪಾರ್ಹವಾದ ಆದೇಶದ ಕುರಿತು ಕ್ರಮ ಕೈಗೊಳ್ಳುವ ಸ್ವಾತಂತ್ರ್ಯ ಅರ್ಜಿದಾರರಿಗೆ ಇದೆ. ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ.
2025ರ ಜನವರಿ 17ರಂದು ನ್ಯಾಯಾಲಯ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯವನ್ನು ನಿರ್ಬಂಧಿಸಿದ್ದು, ನಂತರ ರೇವಣ್ಣ ಅವರ ಪರ ವಕೀಲರು ಹಲವು ಬಾರಿ ವಿನಾಕಾರಣ ವಿಚಾರಣೆ ಮುಂದೂಡಿಕೆ ಕೋರಿದ್ದರು. ಈ ಹಿನ್ನೆಲೆಯಲ್ಲಿ 2026ರ ಫೆಬ್ರವರಿ 5ರಂದು ಹೈಕೋರ್ಟ್ ಮಧ್ಯಂತರ ಆದೇಶ ತೆರವುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ರೇವಣ್ಣ ಅರ್ಜಿ ಹಿಂಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

