ಬೆಂಗಳೂರು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಬೆನ್ನಲ್ಲೇ ಇಬ್ಬರು ಎಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ.
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಟಿ., ರುದ್ರಮುನಿ, ಕಾರ್ಯನಿರ್ವಾಹಕ ಅಭಿಯಂತರ ಮೊಹಮ್ಮದ್ ಜಾವೇದ್ ಅವರನ್ನು ಅಮಾನತುಗೊಳಿಸಿ ಜಿಬಿಎ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟ ಸಂಬಂಧಿಸಿದಂತೆ ಎಂಜಿನಿಯರ್ ವಿರುದ್ಧ ಕ್ರಮಕೈಗೊಂಡು ಸೇವೆಯಿಂದ ಅಮಾನತು ಮಾಡುವಂತೆ ಸಿಎಂ ಆದೇಶಿಸಿದ್ದಾರೆ. ಬೌರಿಂಗ್ ಆಸ್ಪತ್ರೆ ದುರಂತ ಹಿನ್ನೆಲೆಯಲ್ಲಿ ಗುರುವಾರ ಜಿಬಿಎ ಮುಖ್ಯ ಆಯುಕ್ತರು, ಪಾಲಿಕೆಗಳ ಆಯುಕ್ತರು ಮತ್ತು ಆಸ್ಪತ್ರೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಈ ಕುರಿತಾಗಿ ಸೂಚನೆ ನೀಡಿದ್ದಾರೆ.
ತಡೆಗೋಡೆಗೆ ಹಾನಿಯಾಗುವ ಸಾಧ್ಯತೆ ಇದ್ದರೂ ಕಾಮಗಾರಿಯ ಮಣ್ಣನ್ನು ಅಲ್ಲಿ ಸುರಿದಿದ್ದು ಏಕೆ? ಅದನ್ನು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ತಾರಾಟಗೆ ತೆಗೆದುಕೊಂಡು, ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಕರಣವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದ್ದು ಲ್ಲಿ ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಇಂಜಿನಿಯರ್ ಸೇರಿದಂತೆ ಆರು ಜನರನ್ನು ತನಿಖಾ ಸಮಿತಿ ಒಳಗೊಂಡಿದೆ. 7 ದಿನದೊಳಗೆ ತನಿಖೆ ನಡೆಸಿ ವರದಿ ನೀಡಲು ಆದೇಶಿಸಲಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸೊಮೊಟೊ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

