ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿ ನಡೆದ ಅಕ್ರಮ ಕಲ್ಲು ಗಣಿಗಾರಿಕೆ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಈ ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದ ಬಂಡೆ ಸ್ಫೋಟದಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದು, ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಹಾರ ಮೂಲದ 8 ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಮುಂಜಾನೆ ಸಂಭವಿಸಿದ ಭೀಕರ ಸ್ಫೋಟ
ಪ್ರಾಥಮಿಕ ಮಾಹಿತಿಯ ಪ್ರಕಾರ, ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಅನುಮತಿ ಇಲ್ಲದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಇಂದು ಬೆಳಗಿನ ಜಾವ ಕಾರ್ಮಿಕರು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಬಂಡೆ ಒಡೆಯಲು ಬಳಸಿದ ಜಿಲೆಟಿನ್ ಸ್ಫೋಟಕಗಳಿಂದ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಬೃಹತ್ ಬಂಡೆಗಳು ಕಾರ್ಮಿಕರ ಮೇಲೆ ಉರುಳಿ ಬಿದ್ದಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. .ಸ್ಥಳದಲ್ಲಿ ಸುಮಾರು 15-16 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ, ಹಲವರು ಬಂಡೆಯಡಿ ಸಿಲುಕಿರುವ ಶಂಕೆ ಕೂಡ ವ್ಯಕ್ತವಾಗಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು
ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳ ಗುರುತು ಪತ್ತೆ ಹಾಗೂ ಸಾವಿನ ನಿಖರ ಸಂಖ್ಯೆಯನ್ನು ದೃಢೀಕರಿಸುವ ಕಾರ್ಯ ನಡೆಯುತ್ತಿದೆ. ಘಟನಾ ಸ್ಥಳವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಹಿಂದೆಯೂ ಎಚ್ಚರಿಕೆ ಸಿಕ್ಕಿದ್ದರೂ ಕ್ರಮವಿಲ್ಲ?
ಈ ದುರಂತದ ಬಳಿಕ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ಕ್ವಾರಿಯಲ್ಲಿ ಈ ಹಿಂದೆ ನಿಯಮಬಾಹಿರ ಸ್ಫೋಟದ ಪರಿಣಾಮ ಕಲ್ಲು ಬಿದ್ದು ಚಿರತೆಯೊಂದು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆಗಲೇ ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೆ, ಇಂತಹ ಮಾನವೀಯ ದುರಂತ ತಪ್ಪಿಸಬಹುದಿತ್ತು ಎಂಬ ಆರೋಪಗಳು ಕೇಳಿಬಂದಿವೆ.
ತನಿಖೆ ಮುಂದುವರಿಕೆ
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಕ್ರಮ ಗಣಿಗಾರಿಕೆ, ಸುರಕ್ಷತಾ ನಿಯಮ ಉಲ್ಲಂಘನೆ ಹಾಗೂ ಸ್ಫೋಟಕಗಳ ಬಳಕೆ ಕುರಿತು ಸಮಗ್ರ ತನಿಖೆ ಆರಂಭಿಸಿದ್ದಾರೆ. ಮೃತರ ಗುರುತು ಪತ್ತೆ ಹಾಗೂ ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ.

