Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ಭಾರೀ ವಿವಾದ ಎಬ್ಬಿಸಿದ ಎಸ್‌ಐಆರ್; ಕಲ್ಯಾಣ ಮಂಟಪ, ಅಂಗನವಾಡಿ ಎಲ್ಲೆಂದರಲ್ಲಿ ಸಮೀಕ್ಷೆ

ರಾಜ್ಯದಲ್ಲಿ ಭಾರೀ ವಿವಾದ ಎಬ್ಬಿಸಿದ ಎಸ್‌ಐಆರ್; ಕಲ್ಯಾಣ ಮಂಟಪ, ಅಂಗನವಾಡಿ ಎಲ್ಲೆಂದರಲ್ಲಿ ಸಮೀಕ್ಷೆ

ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಚುನಾವಣೆಯ ವಿಶ್ವಾಸಾರ್ಹತೆಯನ್ನು ನಿರ್ಧರಿಸುವ 'ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ' (SIR) ಪ್ರಕ್ರಿಯೆಯು ಇದೀಗ ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಪಾರದರ್ಶಕವಾಗಿ ನಡೆಯಬೇಕಿದ್ದ ಈ ಪ್ರಕ್ರಿಯೆಯು ಆರಂಭಿಕ ಹಂತದಲ್ಲೇ ಅವ್ಯವಸ್ಥೆ, ಗೊಂದಲ ಮತ್ತು ರಾಜಕೀಯ ಆರೋಪ-ಪ್ರತ್ಯಾರೋಪಗಳ ಸುಳಿಗೆ ಸಿಲುಕಿದ್ದು, ಆಡಳಿತ ಯಂತ್ರದ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

​ಸರ್ಕಾರಿ ನಿಯಮಾವಳಿಗಳ ಪ್ರಕಾರ, ಬೂತ್ ಮಟ್ಟದ ಅಧಿಕಾರಿಗಳು (BLO) ತಮ್ಮ ನಿಗದಿತ ಕೇಂದ್ರಗಳಲ್ಲಿ ಅಥವಾ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕಿತ್ತು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ರಾಜ್ಯದ ಹಲವೆಡೆ ಬಿಎಲ್‍ಒಗಳು ಮಸೀದಿಗಳು, ಖಾಸಗಿ ಕಲ್ಯಾಣ ಮಂಟಪಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಟೇಬಲ್ ಹಾಕಿಕೊಂಡು ಕುಳಿತಿರುವುದು ಬೆಳಕಿಗೆ ಬಂದಿದೆ.

ರಾಮನಗರ, ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಈ ಪ್ರವೃತ್ತಿ ತೀವ್ರವಾಗಿದೆ. ಮತದಾರರ ಪಟ್ಟಿಯಂತಹ ಸೂಕ್ಷ್ಮ ದಾಖಲೆಗಳನ್ನು ಸರ್ಕಾರಿ ಕಚೇರಿಯ ಹೊರಗೆ ಕೊಂಡೊಯ್ದು, ಖಾಸಗಿ ವ್ಯಕ್ತಿಗಳ ಸಹಭಾಗಿತ್ವದಲ್ಲಿ ಪರಿಷ್ಕರಣೆ ಮಾಡುತ್ತಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

​ಅರ್ಹ ಮತದಾರರ ಹೆಸರು ಕೈಬಿಡುವಿಕೆ: ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಮುನ್ಸೂಚನೆಯಿಲ್ಲದೆ ಏಕಾಏಕಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಸ್ಥಳೀಯರನ್ನು ಕಡೆಗಣಿಸಿ, ಹೊರಗಿನವರನ್ನು ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ದೂರುಗಳು ವ್ಯಾಪಕ

ವಾಗಿವೆ. ಇದು ಜನಸಂಖ್ಯಾ ಸಮತೋಲನ ಮತ್ತು ಮತದಾನದ ಫಲಿತಾಂಶದ ಮೇಲೆ ಪ್ರಭಾವ ಬೀರಬಹುದು ಎಂಬ ಆತಂಕ ಸಾರ್ವಜನಿಕರಲ್ಲಿದೆ.ಸಾರ್ವಜನಿಕರು ಮಾಹಿತಿ ಕೋರಿ ಹೋದಾಗ ಅಧಿಕಾರಿಗಳು ಸೂಕ್ತ ಉತ್ತರ ನೀಡುತ್ತಿಲ್ಲ. ಇಂತಹ ವರ್ತನೆ ಆಡಳಿತದ ಮೇಲಿರುವ ವಿಶ್ವಾಸವನ್ನು ಕುಂದಿಸಿದೆ.

​ಈ ಗೊಂದಲದ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯನ್ನು ಖಾಸಗೀಕರಣಗೊಳಿಸುತ್ತಿರುವ ಕ್ರಮವನ್ನು ತಕ್ಷಣವೇ ನಿಲ್ಲಿಸಿ, ಪಾವಿತ್ರ್ಯತೆಯನ್ನು ಕಾಪಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ರಾಮಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಬಗೆದ ದ್ರೋಹವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಿಎಲ್‍ಒ ಅಧಿಕಾರಿಗಳ ದುರ್ಬಳಕೆ

ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ವಿಶೇಷ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಈ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗಿದೆ. ಸ್ಥಳೀಯ ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‍ಒ) ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದು, ಈ ಇಡೀ ಪ್ರಕ್ರಿಯೆಯೇ ಕಾನೂನುಬಾಹಿರ ಮತ್ತು ನಿಯಮಬಾಹಿರವಾಗಿದೆ ಎಂದು ಸಚಿವರು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದಿಂದ ವ್ಯವಸ್ಥಿತ ಸಂಚು?

ಸ್ವತಂತ್ರವಾಗಿ ನಡೆಯಬೇಕಾದ ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ನೇರವಾಗಿ ಹಸ್ತಕ್ಷೇಪ ಮಾಡಿದೆ ಎಂದು ಜೋಶಿ ದೂರಿದ್ದಾರೆ. ಕೇವಲ ರಾಜಕೀಯ ಲಾಭಕ್ಕಾಗಿ, ಮತದಾರರ ಪಟ್ಟಿಯನ್ನು ತಮಗೆ ಅನುಕೂಲವಾಗುವಂತೆ ತಿರುಚಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಪರಿಷ್ಕರಣೆಯು ರಾಜಕೀಯ ಪ್ರಭಾವದಿಂದ ಕೂಡಿದ್ದು, ಸ್ಥಳೀಯ ಆಡಳಿತದ ಮೇಲೆ ತೀವ್ರ ಒತ್ತಡ ಹೇರಲಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯ ಮತದಾರರ ಧ್ವನಿಯನ್ನು ಹತ್ತಿಕ್ಕಲು ನಡೆಸಿರುವ ಈ ಬೃಹತ್ ಹಗರಣದ ಹಿಂದೆ ಯಾರ ಹಿತಾಸಕ್ತಿಗಳು ಅಡಗಿವೆ ಎಂಬುದನ್ನು ಪತ್ತೆ ಹಚ್ಚಬೇಕಿದೆ. ಸಾಂವಿಧಾನಿಕ ವ್ಯವಸ್ಥೆಯ ಹಸ್ತಕ್ಷೇಪವು ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ. ಹೀಗಾಗಿ, ತಕ್ಷಣವೇ ನಿಷ್ಪಕ್ಷಪಾತ, ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

ರಾಮನಗರದಲ್ಲಿ ಅಕ್ರಮ ಆರೋಪ

ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಗುರುವಾರ ಗಂಭೀರ ಆರೋಪ ಮಾಡಿದ್ದರು. ಬಿಎಲ್‍ಒಗಳು ಮನೆ ಮನೆಗೆ ಹೋಗಿ ಪರಿಶೀಲನೆ ನಡೆಸುವ ಬದಲು, ರಾಮನಗರದ ಕಲ್ಯಾಣ ಮಂಟಪವೊಂದರಲ್ಲಿ (ಚೌಲ್ಟ್ರಿ) ಜನರನ್ನು ಕೂರಿಸಿ ಎಸ್‍ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ‘ಕೈ’ ಸರ್ಕಾರದ ಸೂಚನೆಯಂತೆ ಬಾಂಗ್ಲಾದೇಶದ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸಲು ನಕಲಿ ಐಡಿ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ, ಬೆಂಗಳೂರಿನ ಜಯನಗರದಲ್ಲಿ ಎಸ್‍ಐಆರ್ ಪ್ರಕ್ರಿಯೆಯನ್ನು ಮಸೀದಿಯ ಒಳಗಡೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರವು ಬಿಎಲ್‍ಒಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ನಿಯಮಬಾಹಿರವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಬೇಡಿಕೆಗಳು:

​ಖಾಸಗಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ.

​ರಾಜಕೀಯ ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಪ್ರಕ್ರಿಯೆ ನಡೆಸುವುದು.​ಹೆಸರು ಸೇರ್ಪಡೆ/ತೆಗೆದುಹಾಕುವ ವಿಧಾನದ ಬಗ್ಗೆ ಸಾರ್ವಜನಿಕರಿಗೆ ಪಾರದರ್ಶಕ ಮಾಹಿತಿ ಸೇರಿದಂತೆ ಹಲವು ದಾಖಲೆಗಳನ್ನು ಒದಗಿಸಬೇಕು

​ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸಲು ಈ ಪ್ರಕ್ರಿಯೆಯನ್ನು ಕೈಗೊಂಡಿದೆ. ಆದರೆ, ಮೈದಾನ ಮಟ್ಟದಲ್ಲಿನ ಅವ್ಯವಸ್ಥೆಗಳು ಆಯೋಗದ ಮೇಲಿರುವ ನಂಬಿಕೆಯನ್ನು ಅಲುಗಾಡಿಸಿವೆ. ತಜ್ಞರ ಅಭಿಪ್ರಾಯದಂತೆ, ಬಿಎಲ್‍ಒಗಳಿಗೆ ಸೂಕ್ತ ತರಬೇತಿಯ ಕೊರತೆ, ರಾಜಕೀಯ ಪಕ್ಷಗಳ ಕಾರ್ಯಕರ್ತರ ಅನಗತ್ಯ ಹಸ್ತಕ್ಷೇಪ ಮತ್ತು ಮೇಲ್ವಿಚಾರಣಾ ವ್ಯವಸ್ಥೆಯ ವೈಫಲ್ಯವೇ ಈ ಗೊಂದಲಗಳಿಗೆ ಪ್ರಮುಖ ಕಾರಣಗಳಾಗಿವೆ.

​ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಬುನಾದಿ. ಈ ಬುನಾದಿಯಲ್ಲೇ ಬಿರುಕು ಮೂಡಿದರೆ, ಭವಿಷ್ಯದ ಚುನಾವಣೆಗಳ ವಿಶ್ವಾಸಾರ್ಹತೆ ಮಣ್ಣುಪಾಲಾಗಲಿದೆ. ಆಯೋಗವು ಕಾಲಹರಣ ಮಾಡದೆ, ಕೂಡಲೇ ಮಧ್ಯಪ್ರವೇಶಿಸಿ ಲೋಪದೋಷಗಳನ್ನು ಸರಿಪಡಿಸಬೇಕು. ಇಲ್ಲವಾದರೆ, ಆಯೋಗದ ನಿಷ್ಪಕ್ಷಪಾತದ ಬಗ್ಗೆ ಜನರಿಗಿರುವ ನಂಬಿಕೆ ಸಂಪೂರ್ಣವಾಗಿ ಕಮರಿಹೋಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia