ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರವಿಪಕ್ಷಗಳ ಒತ್ತಡ ಹಾಗೂ ಸಾರ್ವಜನಿಕವಾಗಿ ಹೆಚ್ಚುತ್ತಿರುವ ಆಕ್ರೋಶದ ಬೆನ್ನಲ್ಲೇ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಜತೆ ನಡೆಸಿದ ಸಭೆಯಲ್ಲಿ ಒಬ್ಬರನ್ನು ಕೈಬಿಟ್ಟು ಇಬ್ಬರನ್ನು ಸೇರ್ಪಡೆ ಮಾಡಿಕೊಳ್ಳಲು ಚರ್ಚೆ ನಡೆಸಿದ್ದು, ಇದಕ್ಕೆ ಒಪ್ಪಿಗೆ ದೊರೆತಿದೆ. ಸದ್ಯ ನಾಗೇಂದ್ರ ಬದಲಾಗಿ ಸಂಡೂರಿನ ಅನ್ನಪೂರ್ಣ ತುಕಾರಾಂ ಹಾಗೂ ಬ್ಯಾಡಗಿಯ ಬಸವರಾಜ ನೀಲಪ್ಪ ಶಿವಣ್ಣವರ್ ಸಚಿವರಾಗುವ ಸಾಧ್ಯತೆಗಳಿವೆ.
ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟಕ್ಕೆ ಮಿನಿ ಸರ್ಜರಿ ನಡೆಯಲಿದ್ದು, ಹೊಸದಾಗಿ ಇಬ್ಬರಿಗೆ ಕ್ಯಾಬಿನೆಟ್ನಲ್ಲಿ ಅವಕಾಶ ನೀಡುವ ನಿರೀಕ್ಷೆಯಿದೆ. ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಗುರುವಾರ ಬೆಳಗ್ಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ರಾಜ್ಯ ರಾಜಕೀಯದಲ್ಲಿನ ವಿದ್ಯಮಾನ ಕುರಿತು ವಿವರಣೆ ನೀಡಿದರು. ಒಬ್ಬರನ್ನು ಕ್ಯಾಬಿನೆಟ್ನಿಂದ ಕೈಬಿಟ್ಟು, ಹೊಸದಾಗಿ ಇಬ್ಬರನ್ನು ತೆಗೆದುಕೊಳ್ಳಲು ಸಣ್ಣ ಪ್ರಮಾಣದಲ್ಲಿ ಸಂಪುಟ ಪುನಾರಚನೆ ಮಾಡುವ ಸಿಎಂ ಪ್ರಸ್ತಾಪಕ್ಕೆ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದರು ಎಂದು ತಿಳಿದು ಬಂದಿದೆ.
ವಿಪಕ್ಷಗಳ ಬಿಗಿ ಪಟ್ಟು ಹಾಗೂ ಈ ವಿಚಾರದಲ್ಲಿ ಸಾರ್ವಜನಿಕವಾಗಿ ಪಕ್ಷ ಮತ್ತು ಸರ್ಕಾರಕ್ಕೆ ಆಗುತ್ತಿರುವ ಮುಜುಗರದ ಹಿನ್ನೆಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಎಐಸಿಸಿ ಹೈಕಮಾಂಡ್ ಒಪ್ಪಿದೆ. ಒಂದೆರಡು ದಿನಗಳಲ್ಲಿ ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದು, ಅದರ ಬೆನ್ನಲ್ಲೇ ಮುಂದಿನ ಸೋಮವಾರ ಅಥವಾ ಮಂಗಳವಾರ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಅದೇ ಪರಿಶಿಷ್ಟ ಪಂಗಡದ ಕೋಟಾದಲ್ಲಿ ಅನ್ನಪೂರ್ಣ ತುಕಾರಾಂ ಅವರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ. ಆ ಮೂಲಕ ಬಳ್ಳಾರಿ ಜಿಲ್ಲೆಯ ಪ್ರಾತಿನಿಧ್ಯ ಉಳಿಸಿಕೊಳ್ಳುವ ಜತೆಗೆ, ಕ್ಯಾಬಿನೆಟ್ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಕಲ್ಪಿಸುವ ಲೆಕ್ಕಾಚಾರ ನಡೆದಿದೆ. ನಾಗೇಂದ್ರ ಅವರ ಸ್ಥಾನಕ್ಕೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರ ಹೆಸರನ್ನು ಪರಿಗಣಿಸಬೇಕು ಎಂದು ಪ್ರಭಾವಿ ನಾಯಕರೊಬ್ಬರು ಪ್ರಯತ್ನ ನಡೆಸಿದರೂ ಅಂತಿಮವಾಗಿ, ಅನ್ನಪೂರ್ಣ ಅವರ ಆಯ್ಕೆಗೆ ವರಿಷ್ಠ ನಾಯಕರು ಸಮ್ಮತಿಸಿದ್ದಾರೆ ಎಂಬ ಮಾಹಿತಿಯಿದೆ.
ಮತ್ತೊಂದು ಸ್ಥಾನಕ್ಕೆ ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ ನೀಲಪ್ಪ ಶಿವಣ್ಣವರ್ ಅವರನ್ನು ಪರಿಗಣಿಸಲಾಗುತ್ತಿದೆ. ಉತ್ತರ ಕರ್ನಾಟಕದ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಲು ಬ್ಯಾಡಗಿಯ ಬಸವರಾಜ ನೀಲಪ್ಪ ಶಿವಣ್ಣವರ್ ಅವರಿಗೆ ಅವಕಾಶ ನೀಡಬೇಕು ಎಂಬ ತಮ್ಮ ಸಲಹೆಯನ್ನು ಪರಿಗಣಿಸಲಿಲ್ಲಎಂಬ ಕಾರಣಕ್ಕೆ ಮುನಿಸಿಕೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಈ ಮೂಲಕ ಸಮಾಧಾನಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

