Dailyhunt Logo
  • Light mode
    Follow system
    Dark mode
    • Play Story
    • App Story
ಬೆಂಗಳೂರಲ್ಲಿ ಐತಿಹಾಸಿಕ ಒತ್ತುವರಿ ತೆರವು: ಕೆ.ಆರ್ ಮಾರುಕಟ್ಟೆಯಲ್ಲಿ ಬರೋಬ್ಬರಿ 233 ಅಂಗಡಿ ಮಳಿಗೆ ತೆರವು

ಬೆಂಗಳೂರಲ್ಲಿ ಐತಿಹಾಸಿಕ ಒತ್ತುವರಿ ತೆರವು: ಕೆ.ಆರ್ ಮಾರುಕಟ್ಟೆಯಲ್ಲಿ ಬರೋಬ್ಬರಿ 233 ಅಂಗಡಿ ಮಳಿಗೆ ತೆರವು

Kannada News Now 1 week ago

ಬೆಂಗಳೂರು : ನಗದರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಐತಿಹಾಸಿಕ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದು ನಡೆಸಲಾಯಿತು. ಕೆ ಆರ್ ಮಾರುಕಟ್ಟೆ ವ್ಯಾಪ್ತಿಯಲ್ಲಿ ಬರೋಬ್ಬರಿ 233 ಅಂಗಡಿ ಮಳಿಗೆಗಳನ್ನು ತೆರವುಗೊಳಿಸಲಾಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ದಿ ಸಚಿವರಾದ ಕೃಷ್ಣ ಬೈರೆಗೌಡ ರವರ ಆದೇಶದಂತೆ ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆಯಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಚಾಮರಾಜಪೇಟೆ ವಿಭಾಗದ ಕೆ.ಆರ್.

ಮಾರ್ಕೆಟ್ ಮುಂಭಾಗದಲ್ಲಿ ಮೈಸೂರು ರಸ್ತೆ ಮೇಲ್ಸೇತುವೆ ಕೇಳಭಾಗದಲ್ಲಿ ಹಾಗೂ ವಿಕ್ಟೋರಿಯಾ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ಒತ್ತುವರಿಯನ್ನು ತೆರವುಗೊಳಿಸುವ ಐತಿಹಾಸಿಕ ಕಾರ್ಯಾಚರಣೆ ಇಂದು ಬೆಳಿಗ್ಗೆ 10.00 ಗಂಟೆಯಿಂದ ಯಶಸ್ವಿಯಾಗಿ ಕೈಗೊಳ್ಳಲಾಯಿತು. ನಗರದ ಅತ್ಯಂತ ಕ್ಲಿಷ್ಟಕರ ಹಾಗೂ ಸವಾಲಿನ ಒತ್ತುವರಿ ಪ್ರದೇಶಗಳಲ್ಲಿ ಒಂದಾಗಿದ್ದ ಈ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವ ಮೂಲಕ ವಾಹನ ಸವಾರರಿಗೆ ಪಾದಚಾರಿಗಳಿಗೆ ಮುಕ್ತ ಹಾಗೂ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಅತ್ಯಂತ ಜನನಿಬಿಡ ಹಾಗೂ ವ್ಯಾಪಾರ ಚಟುವಟಿಕೆಗಳು ಹೆಚ್ಚಿರುವ ಈ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಪಾದಚಾರಿ ಮಾರ್ಗಗಳು ಒತ್ತುವರಿಗೊಳಗಾಗಿ ಸಾರ್ವಜನಿಕರು, ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು ಹಾಗೂ ರೋಗಿಗಳು ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಶೇಷವಾಗಿ ವಿಕ್ಟೋರಿಯಾ ಆಸ್ಪತ್ರೆ, ಕೆ.ಆರ್. ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರತಿದಿನ ಲಕ್ಷಾಂತರ ಸಾರ್ವಜನಿಕರು, ವಾಹನಗಳು ಸಂಚರಿಸುವ ಹಿನ್ನೆಲೆಯಲ್ಲಿ, ಸಾರ್ವಜನಿಕ ವಾಹನಗಳ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಾಚರಣೆಗೆ ಆದ್ಯತೆ ನೀಡಲಾಯಿತು.

233 ಅಂಗಡಿಗಳ ಒತ್ತುವರಿ ತೆರವಿಗೆ ಬೃಹತ್ ಕಾರ್ಯಾಚರಣೆ

ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಬಳಕೆಗೆ ಮರುಸ್ಥಾಪಿಸುವ ಉದ್ದೇಶದಿಂದ ಸಮಗ್ರ ಯೋಜನೆ ರೂಪಿಸಿ, ಇಂದು ಒಟ್ಟು 233 ಒತ್ತುವರಿ ಅಂಗಡಿಗಳನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆ ನಡೆಸಲಾಯಿತು. ಹಲವು ವರ್ಷಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಒತ್ತುವರಿ ತೆರವು ಮಾಡುವ ಮೂಲಕ ಪಾದಚಾರಿ ಮಾರ್ಗಗಳನ್ನು ಸಂಪೂರ್ಣವಾಗಿ ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ಮುಕ್ತಗೊಳಿಸಲಾಗಿದೆ.

ಪ್ರದೇಶವಾರು ತೆರವು ಕಾರ್ಯಾಚರಣೆ

ಚಾಮರಾಜಪೇಟೆ ವಿಭಾಗದ ವಿವಿಧ ಪ್ರದೇಶಗಳಾದ ವಿಕ್ಟೋರಿಯಾ ಆಸ್ಪತ್ರೆಯ ಬಲಭಾಗದಲ್ಲಿದ್ದ ಅಂಗಡಿಗಳು ಪಾದಚಾರಿಗಳ ಸುರಕ್ಷಾ ಗ್ರಿಲ್ ಒಳಭಾಗದಲ್ಲಿದ್ದ 200 ಅಂಗಡಿಗಳು ಶ್ರೀ ಬಾಲಗಂಗಾಧರನಾಥ ಸ್ವಾಮಿ ಮೇಲ್ಸೇತುವೆ (ಮೈಸೂರು ರೋಡ್ ಫ್ಲೈಓವರ್) ಕೆಳಭಾಗದಲ್ಲಿದ್ದ 33 ಅಂಗಡಿಗಳು ಹಾಗೂ ಸೇರಿದಂತೆ ಒಟ್ಟು 233 ಒತ್ತುವರಿ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತು.

ಕಾರ್ಯಾಚರಣೆಗೆ ಅಗತ್ಯ ವಾಹನಗಳ ವ್ಯವಸ್ಥೆ

ಸದರಿ ಕಾರ್ಯಾಚರಣೆಯನ್ನು ವೇಗವಾಗಿ, ಸುಗಮವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಕೇಂದ್ರ ನಗರ ಪಾಲಿಕೆಯ ವತಿಯಿಂದ 6 ಜೆಸಿಬಿಗಳು, 4 ಬೃಹತ್ ಟಿಪ್ಪರ್ ಲಾರಿಗಳು ಹಾಗೂ 10 ಟ್ರ್ಯಾಕ್ಟರ್‌ಗಳನ್ನು ನಿಯೋಜಿಸಲಾಗಿತ್ತು. ಒತ್ತುವರಿ ತೆರವುಗೊಳಿಸುವುದರ ಜೊತೆಗೆ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ತೆರವುಗೊಳಿಸಲಾದ ವಸ್ತುಗಳನ್ನು ತ್ವರಿತವಾಗಿ ಸ್ಥಳಾಂತರಿಸುವ ಕಾರ್ಯವು ಕೈಗೊಳ್ಳಲಾಗಿದೆ.

ಮುಂಚಿತವಾಗಿ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿ ಕಾನೂನುಬದ್ಧ ಕ್ರಮ

ಒತ್ತುವರಿ ತೆರವು ಕಾರ್ಯಾಚರಣೆಗೆ ಮುನ್ನ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಾರ್ಷಲ್ ತಂಡವು ಸೋಮವಾರ ಮತ್ತು ಮಂಗಳವಾರದಂದು ಕೆ.ಆರ್. ಮಾರ್ಕೆಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೈಕ್ ಮೂಲಕ ಸಾರ್ವಜನಿಕ ಪ್ರಕಟಣೆಗಳನ್ನು ನೀಡಿ, ಪಾದಚಾರಿ ಮಾರ್ಗಗಳ ಮೇಲಿನ ಅನಧಿಕೃತ ಅಂಗಡಿಗಳು ಮತ್ತು ಒತ್ತುವರಿಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸುವಂತೆ ಅಂಗಡಿ ಮಾಲೀಕರಿಗೆ ಮನವಿ ಮಾಡಿತು. ಅಲ್ಲದೆ, ತೆರವು ಕಾರ್ಯಾಚರಣೆ ಬಗ್ಗೆ ಅಧಿಕೃತ ಸೂಚನಾ ಸ್ಟಿಕ್ಕರ್ ಗಳನ್ನು ಸಂಬಂಧಿಸಿದ ಅಂಗಡಿಗಳಿಗೆ ಅಂಟಿಸುವ ಮೂಲಕ ಮುಂಗಡ ಮಾಹಿತಿ ನೀಡಲಾಯಿತು. ಈ ಎಲ್ಲಾ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಂಡ ಬಳಿಕವೇ ಕಾನೂನು ಬದ್ಧವಾಗಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.

ಸರ್ವೋಚ್ಛ ನ್ಯಾಯಾಲಯ ಹಾಗೂ ಮಾನ್ಯ ಹೈಕೋರ್ಟ್ ಆದೇಶದನ್ವಯ ಕಾನೂನುಬದ್ಧವಾಗಿ ಒತ್ತುವರಿ ತೆರವು

ಮಾನ್ಯ ಸರ್ವೋಚ್ಛ ನ್ಯಾಯಾಲಯ ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡಲು ನೀಡಿದ ತೀರ್ಪು ಹಾಗೂ ಹಾಗೂ ಮಾನ್ಯ ಹೈಕೋರ್ಟ್ ನೀಡಿದ ತೀರ್ಪಿನ ಆದೇಶದನ್ವಯ ಕಾನೂನುಬದ್ಧವಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ವಿವಿಧ ವಿಭಾಗಗಳ ಸಿಬ್ಬಂದಿಯ ಸಮನ್ವಯದೊಂದಿಗೆ ಯಶಸ್ವಿಯಾದ ಕಾರ್ಯಾಚರಣೆ.

ಕಾರ್ಯಾಚರಣೆ ಸಂದರ್ಭದಲ್ಲಿ ಕೇಂದ್ರ ನಗರ ಪಾಲಿಕೆಯ ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ಇಂಜಿನಿಯರಿಂಗ್ ವಿಭಾಗದಿಂದ 90 ಜನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಿಬ್ಬಂದಿ (BSWML) ವಿಭಾಗದಿಂದ 60 ಜನ ಅಧಿಕಾರಿಗಳು /ಸಿಬ್ಬಂದಿಗಳು ಹಾಗೂ ಆರೋಗ್ಯ ವಿಭಾಗದಂದ 20 ಜನ, ಕಂದಾಯ ವಿಭಾಗದ 20 ಜನ, ಪೊಲೀಸ್ ವಿಭಾಗದ 60 ಜನ ಅಧಿಕಾರಿಗಳು / ಸಿಬ್ಬಂದಿಗಳು, ಬೆಸ್ಕಾಂ ನ 20 ಜನ, ಅಗ್ನಿಶಾಮಕ ಇಲಾಖೆಯ ಒಂದು ತಂಡ, ಸಿಬ್ಬಂದಿ ಸೇರಿದಂತೆ ವಿವಿಧ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ

ಕಾರ್ಯಾಚರಣೆಯನ್ನು ಯಾವುದೇ ಅಡಚಣೆ ಇಲ್ಲದೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಡೆಸಲು ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಸ್ಕಾಂ, ವೈದ್ಯಕೀಯ ಸಿಬ್ಬಂದಿ ಹಾಗೂ ಆಂಬುಲೆನ್ಸ್ ಸೇವೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಕೇಂದ್ರ ನಗರ ಪಾಲಿಕೆಯ ಆಯುಕ್ತರು ರವರ ನೇತೃತ್ವದಲ್ಲಿ ಹಾಗೂ ಅಭಿವೃದ್ಧಿ ಅಪರ ಆಯುಕ್ತರ ಉಪಸ್ಥಿತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿ

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ. ಅವರ ದೃಢ ನಿರ್ಧಾರ ಹಾಗೂ ನೇತೃತ್ವದಲ್ಲಿ ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟಾಚಲಪತಿ ಅವರ ಉಪಸ್ಥಿತಿಯಲ್ಲಿ ಇಂದು ಚಾಮರಾಜಪೇಟೆ ವಿಭಾಗದ ಕೆ.ಆರ್. ಮಾರ್ಕೆಟ್ ಮುಂಭಾಗದ ಮೈಸೂರು ರಸ್ತೆಯಲ್ಲಿ, ಮೇಲ್ಸೇತುವೆ ಕೇಳಭಾಗದಲ್ಲಿ, ವಿಕ್ಟೋರಿಯಾ ಆಸ್ಪತ್ರೆ ಕಂಪೌಂಡ್ ಗೆ ಹೊಂದಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಅಧಿಕಾರಿಗಳು/ ಸಿಬ್ಬಂದಿಗಳು, ಅಭಿಯಂತರರುಗಳು ಸ್ಥಳದಲ್ಲಿದ್ದು ಪರಿಣಾಮಕಾರಿಯಾಗಿ ಒತ್ತುವರಿ ತೆರವು ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲಾಯಿತು.

ಪಾದಚಾರಿಗಳಿಗೆ ಸುರಕ್ಷಿತ ಸಂಚಾರಕ್ಕೆ ಆದ್ಯತೆ

ನಗರದ ಪಾದಚಾರಿ ಮಾರ್ಗಗಳನ್ನು ಒತ್ತುವರಿಯಿಂದ ಮುಕ್ತಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್.ಜಿ ರವರು ತಿಳಿಸಿರುತ್ತಾರೆ.

ಬೃಹತ್ ಒತ್ತುವರಿ ಕಾರ್ಯಾಚರಣೆಯಲ್ಲಿ ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟಾಚಲಪತಿ, ಜಂಟಿ ಆಯುಕ್ತ ಹೇಮಂತ್ ಶರಣ್, ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ಚಾಮರಾಜಪೇಟೆ ಕಾರ್ಯಪಾಲಕ ಇಂಜಿನಿಯರ್ ಭಾಸ್ಕರ್ ರೆಡ್ಡಿ, BSWML ಅಧಿಕಾರಿಗಳು, ಮಾರುಕಟ್ಟೆ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ KSRP ಬಂದೋಬಸ್ತ್ ಸಿಬ್ಬಂದಿಗಳು, ಬೆಸ್ಕಾಂ, ಅಗ್ನಿಶಾಮಕ, ಕಂದಾಯ ವಿಭಾಗದ ಸಿಬ್ಬಂದಿಗಳು ಭಾಗವಹಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now