
ಬೆಂಗಳೂರು: : ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟಲು ಪರೀಕ್ಷಾ ವಿಧಾನದಲ್ಲಿಯೇ ಬದಲಾವಣೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಹಾಗೂ ಶಾಸನ ರಚನೆ ಸಚಿವ ಬಸವರಾಜು ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಯವರ ಪರವಾಗಿ ಉತ್ತರ ನೀಡಿ, ಮಾಹಿತಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರೀಕ್ಷೆಗಳನ್ನು ಆನ್ಲೈನ್ ಮುಖಾಂತರ ನಡೆಸುವ ಬಗ್ಗೆ ಕೇಂದ್ರ ಲೋಕಸೇವಾ ಆಯೋಗದೊಂದಿಗೆ ಚರ್ಚಿಸಿ, ಅಲ್ಲಿನ ವಿಧಾನವನ್ನು ಅಳವಡಿಸಿಕೊಳ್ಳುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದರು.
ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಗಳಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಪರೀಕ್ಷಾ ದಿನದಂದು ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಹಾಲಿ ನಿಯಮಗಳಂತೆ ಕೇವಲ ಓ.ಎಂ.ಆರ್ ಮೂಲಕ ಉತ್ತರಿಸುವ ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸದೆ, ಕೇಂದ್ರ ಲೋಕಸೇವಾ ಆಯೋಗ ಮತ್ತು ಸಿಬ್ಬಂದಿ ಆಯ್ಕೆ ಆಯೋಗದ ಮಾದರಿಯಲ್ಲಿ ಎರಡು ಹಂತದಲ್ಲಿ ಒಂದು ವಸ್ತು ನಿಷ್ಠ ಬಹು ಆಯ್ಕೆ ಮಾದರಿ ಮತ್ತೊಂದು ವಿವರಣಾತ್ಮಕ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ನಿಯಮಗಳಲ್ಲಿ ತಿದ್ದುಪಡಿ ತರಲು ಪರಿಶೀಲಿಸಲಾಗುತ್ತಿದೆ ಎಂದರು.