ಬೆಂಗಳೂರು, ಜು.31 : ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿ ತ್ಯಾಜ್ಯವನ್ನು ವಿಂಗಡಿಸದೆ ಸಾರ್ವಜನಿಕ ಸ್ಥಳದಲ್ಲಿ ಬಿಸಾಡಿದ್ದ ಹಿನ್ನೆಲೆಯಲ್ಲಿ ಕೋರಮಂಗಲದ ಭೀಮಾ ಜ್ಯುವೆಲ್ಲರ್ಸ್ ಸಂಸ್ಥೆಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ₹50 ಸಾವಿರ ದಂಡ ವಿಧಿಸಿ ವಸೂಲಿ ಮಾಡಿದೆ.
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಕೋರಮಂಗಲ 4ನೇ ಬ್ಲಾಕ್ನ 8ನೇ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಪಾಲಿಕೆಯ ಮಾರ್ಷಲ್ಗಳು ಗಸ್ತು ತಿರುಗುತ್ತಿದ್ದ ವೇಳೆ, ಭೀಮಾ ಜ್ಯುವೆಲ್ಲರ್ಸ್ ಸಂಸ್ಥೆಯು ಹಸಿ ಹಾಗೂ ಒಣ ತ್ಯಾಜ್ಯವನ್ನು ವಿಂಗಡಿಸದೆ ಫುಟ್ಪಾತ್ ಬದಿಯಲ್ಲಿ ಬಿಸಾಡಿರುವುದು ಪತ್ತೆಯಾಯಿತು.
ಘನತ್ಯಾಜ್ಯ ನಿರ್ವಹಣಾ ನಿಯಮಗಳ ಉಲ್ಲಂಘನೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅನೈರ್ಮಲ್ಯ ಉಂಟುಮಾಡಿದ ಕಾರಣ ಸಂಸ್ಥೆಗೆ ಸ್ಥಳದಲ್ಲೇ 50,000 ದಂಡ ವಿಧಿಸಿ ವಸೂಲಿ ಮಾಡಲಾಯಿತು. ಜೊತೆಗೆ, ಸಂಸ್ಥೆಯ ಸಿಬ್ಬಂದಿಗೆ ತ್ಯಾಜ್ಯ ವಿಂಗಡಣೆ, ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದರು.
ನಗರದಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ಮತ್ತು ವಾಣಿಜ್ಯ ಸಂಸ್ಥೆಗಳು ಕಡ್ಡಾಯವಾಗಿ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಪಾಲಿಕೆಗೆ ನೀಡಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

