Dailyhunt Logo
  • Light mode
    Follow system
    Dark mode
    • Play Story
    • App Story

ಎಸ್‌ಐ ಆರ್ ಪ್ರಕ್ರಿಯೆ ಅವಧಿಯನ್ನ ಆಗಸ್ಟ್ 8 ವರೆಗೆ ವಿಸ್ತರಿಸಲಾಗಿದೆ. ಮತದಾರರು ಸದುಪಯೋಗಿಸಿಕೊಳ್ಳಿ- ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿ ಮಂಜುನಾಥ್

Klive News 2 weeks ago

ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದ್ದು, ಅರ್ಹ ಮತದಾರರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸೂಡಾ ಆಯುಕ್ತ ಮಂಜುನಾಥ್ ಅವರು ಹೇಳಿದರು.

ಅವರು ಶಿವಮೊಗ್ಗ ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಆಗಸ್ಟ್ 8ರ ಕೊನೆಯ ದಿನದವರೆಗೂ ಬಿಎಲ್‌ಒ (BLO) ಮನೆಮನೆ ಭೇಟಿಗೆ ನೀಡಿ ಮಾಹಿತಿ ಸಂಗ್ರಹಿಸುವರು. ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ನಂತರ ಸೆಪ್ಟೆಂಬರ್ 16 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಧಿ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಅಕ್ಟೋಬರ್ 15ರೊಳಗಾಗಿ ವಿಲೇವಾರಿ ಮಾಡಲಾಗುವುದು. ಅಕ್ಟೋಬರ್ 19ರಂದು ಮತದಾರರ ಪಟ್ಟಿಯ ಅಂತಿಮ ಪಟ್ಟಿ ಪ್ರಕಟಗೊಳ್ಳಿದೆ ಎಂದವರು ನುಡಿದರು.
ಶಿವಮೊಗ್ಗ ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 2,20,250 ಅರ್ಹ ಮತದಾರರಿದ್ದು, ಈ ಪೈಕಿ 2,17,015 ಮತದಾರರನ್ನು ಡಿಜಿಟಲೀಕರಿಸಿ ಶೇ.98.53ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನೂ 1283ಮಂದಿ ಮತದಾರರು ನೋಂದಣಿ ಕಾರ್ಯದಲ್ಲಿ ಭಾಗವಹಿಸಿರುವುದರಿಂದ ಹಿಂದುಳಿದಿದ್ದಾರೆ. ಅವರನ್ನು ಸದರಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾದ 249 ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಮನೆಗೆ ತೆರಳಿ ಅವರಿಂದ ಮಾಹಿತಿ ಪಡೆದು ಅಪ್‌ಲೋಡ್‌ ಮಾಡಲಿದ್ದಾರೆ ಎಂದವರು ನುಡಿದರು.
ಮತದಾರರ ಪಟ್ಟಿಯಲ್ಲಿ ಗೈರಾಗಿರುವವರು, ಮರಣ ಹೊಂದಿದವರು, ಸ್ಥಳಾಂತರಗೊಂಡಿರುವ ಕುಟುಂಬಗಳು ಹಾಗೂ ಎರೆಡೆರೆಡು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಉಳಿಸಿಕೊಂಡಿರುವವರು ಸೇರಿದಂತೆ ಒಟ್ಟು 17147ಜನರನ್ನು ಗುರುತಿಸಲಾಗಿದೆ. ಆ ಪೈಕಿ 5517ಮತದಾರರು ಮರಣ ಹೊಂದಿರುವುದನ್ನು ಗುರುತಿಸಲಾಗಿದೆ. ಗುರುತಿಸಲಾಗದ ಅಥವಾ ಗೈರಾಗಿರುವ 1283ಮಂದಿಯನ್ನು ಗುರುತಿಸಲಾಗಿದೆ. ತಾಲೂಕಿನಲ್ಲಿ ಒಟ್ಟು ಮತದಾರರಲ್ಲಿ 8108ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ. ಉಳಿದ ಹಾಗೂ ಈವರೆಗೆ ಮಾಹಿತಿಯನ್ನು ನೀಡದಿರುವವರ ಮನೆಮನೆಗೆ ಮತಗಟ್ಟೆ ಅಧಿಕಾರಿಗಳು ತೆರಳಿ ಮಾಹಿತಿ ಪಡೆಯುವ ಕಾರ್ಯವನ್ನು ಮುಂದುವರೆಸಲಿದ್ದಾರೆ ಎಂದರು.
ಈ ಎಲ್ಲಾ ಮಾಹಿತಿಯನ್ನು ರಾಷ್ಟ್ರೀಯ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರಿಗೆ ಈ ಕುರಿತು ಕಾಲಕಾಲಕ್ಕೆ ಮಾಹಿತಿ ನೀಡಲಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಸಹಕರಿಸುವಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಬಾರಿ ಸಭೆಗಳನ್ನು ನಡೆಸಿ, ಮಾಹಿತಿ ನೀಡಲಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ತಹಶೀಲ್ದಾರ್‌ ರಾಜೀವ್‌ ಅವರು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Klive.News