ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಹತ್ವದ ತುರ್ತು ಆದೇಶಗಳನ್ನು ಹೊರಡಿಸಿದೆ.
ಪ್ರಾಧಿಕಾರದ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಜುಲೈ 8, 2026ರ ಬುಧವಾರದಂದು ರಜೆ ಘೋಷಿಸಲಾಗಿದೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದರೆ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ) ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಈ ಅವಧಿಯಲ್ಲಿ ಮಕ್ಕಳು ತಗ್ಗು ಪ್ರದೇಶ, ನದಿ, ಕೆರೆ ಮತ್ತು ಸಮುದ್ರ ತೀರಗಳತ್ತ ಹೋಗದಂತೆ ಪಾಲಕರು ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ. ಮೀನುಗಾರರು ಕಡಲಿಗಿಳಿಯದಂತೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹ ಜಲಾಶಯಗಳು, ನದಿ ಮತ್ತು ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಹಂತದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇದ್ದು, ವಿಪತ್ತು ನಿರ್ವಹಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಲು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಆದೇಶಿಸಲಾಗಿದೆ.
ಅಲ್ಲದೆ, ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಪ್ರಾಕೃತಿಕ ವಿಕೋಪ ಸಂಬಂಧಿತ ತುರ್ತು ಸಹಾಯಕ್ಕಾಗಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ನಿಮ್ಮ ಇಮೇಲ್ ವಿಳಾಸವನ್ನು ಪ್ರಕಟಿಸಲಾಗುವುದಿಲ್ಲ.ಕಡ್ಡಾಯ ಫೀಲ್ಡ್ಗಳನ್ನು * ಮೂಲಕ ಗುರುತಿಸಲಾಗಿದೆ
ಪ್ರತಿಕ್ರಿಯೆ
ಹೆಸರು
ಇಮೇಲ್
ಊರು
ನಂತರದ ಪ್ರತಿಕ್ರಿಯೆಗಾಗಿ ನನ್ನ ಹೆಸರು, ಇಮೇಲ್ ಮತ್ತು ವೆಬ್ಸೈಟ್ ಅನ್ನು ಈ ಬ್ರೌಸರ್ನಲ್ಲಿ ಉಳಿಸಿ.

