Dailyhunt
"ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಅವಕಾಶ"

"ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಅವಕಾಶ"

ಮಂಗಳೂರು: ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಘಟಕಗಳು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕಗಳ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯುವ ದಿನಾಚರಣೆ- 2021 ನ್ನು ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದವು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲೆ ಡಾ. ಅನಸೂಯ ರೈ, ಕೊವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಇರುವ ಮಿತಿಯೊಳಗೆ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಿ ಅವರಲ್ಲಿನ ಕ್ರಿಯಾಶೀಲತೆಯನ್ನು ಜೀವಂತವಾಗಿರಿಸಬೇಕಿದೆ, ಎಂದು ಅಭಿಪ್ರಾಯಪಟ್ಟರು.

ಅತಿಥಿ ಉಪನ್ಯಾಸ ನೀಡಿದ ನೆಹರು ಯುವ ಕೇಂದ್ರದ ಜಿಲ್ಲಾ ಯೂತ್ ಆಫೀಸರ್ ರಘುವೀರ್ ಸೂಟರ್ಪೇಟೆ, ಸ್ವಯಂ ಸೇವೆ ಜನರೊಂದಿಗೆ ಬೆರೆತು ನಾಯಕತ್ವ ಗುಣ, ಸಂವಹನ ಕಲೆ ರೂಢಿಸಿಕೊಳ್ಳಲು ಇರುವ ಅವಕಾಶ. ಉತ್ತಮ ಎನ್‌ಎಸ್‌ಎಸ್ ಸ್ವಯಂ ಸೇವಕನಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಅವಕಾಶವಿದೆ. ದಕ್ಷಿಣ ಕನ್ನಡದ ನಾಲ್ವರು ಸ್ವಯಂಸೇವಕರು ವಿಶ್ವಸಂಸ್ಥೆಗಾಗಿ ದುಡಿಯುತ್ತಿರುವುದು ಹೆಮ್ಮೆಯ ವಿಷಯ, ಎಂದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಬದ್ರುದ್ದೀನ್ ಎಂ.ಎನ್, ಯುವಜನತೆ ಹಾದಿ ತಪ್ಪದೆ ಇರುವ ಅಪಾರ ಅವಕಾಶಗಳನ್ನು ಬಳಸಿಕೊಂಡು ಬೆಳೆಯಬೇಕು, ಎಂದರು.

ಭಿತ್ತಿಚಿತ್ರ ರಚನೆ ಸ್ಪರ್ಧೆಯಲ್ಲಿ ರೋಶನಿ ನಿಲಯ ಕಾಲೇಜಿನ ನವ್ಯಾ ವಿ ಆರ್ ಪ್ರಥಮ ಬಹುಮಾನ ಪಡೆದುಕೊಂಡರೆ, ಎಸ್ಡಿಎಂ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಪಂಚಮಿ ಕೆ ಮತ್ತು ಚೈತನ್ಯ ಎಸ್ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದುಕೊಂಡರು. ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ ಎ ಅತಿಥಿಗಳನ್ನು ಸ್ವಾಗತಿಸಿದರೆ, ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಡಾ. ಗಾಯತ್ರಿ ಎನ್ ಧನ್ಯವಾದ ಸಮರ್ಪಿಸಿದರು. ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Megamedia News Kannada