ಕೋಲಾರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ (Cabinet expansion) ಮುನ್ಸೂಚನೆ ಬೆನ್ನಲ್ಲೇ ಕೋಲಾರ ಜಿಲ್ಲೆಯ (Kolar) ರಾಜಕಾರಣದಲ್ಲಿ ಭಾರಿ ಚಟುವಟಿಕೆಗಳು ಆರಂಭಗೊಂಡಿವೆ. ಜಿಲ್ಲೆಯ ಪ್ರಮುಖ ಶಾಸಕರು ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ಮಟ್ಟದ ಪ್ರಭಾವಿ ನಾಯಕರನ್ನು ಭೇಟಿಯಾಗಿ ತಮಗೆ ಮಂತ್ರಿಗಿರಿ ನೀಡುವಂತೆ ತೀವ್ರ ಒತ್ತಡ ಹೇರುತ್ತಿದ್ದಾರೆ.
ಹೌದು, ಪ್ರಾದೇಶಿಕ ಮತ್ತು ಸಮುದಾಯದ ಲೆಕ್ಕಾಚಾರಗಳ ಆಧಾರದ ಮೇಲೆ ತಮಗೆ ಈ ಬಾರಿ ಅವಕಾಶ ಸಿಗಲೇಬೇಕೆಂದು ನಾಯಕರು ಪಟ್ಟು ಹಿಡಿದಿದ್ದಾರೆ. ಇತ್ತ ದೆಹಲಿಯಲ್ಲಿ ನಾಯಕರು ರಾಜಕೀಯ ದಾಳ ಉರುಳಿಸುತ್ತಿದ್ದರೆ, ಅತ್ತ ಕೋಲಾರ ಜಿಲ್ಲೆಯಾದ್ಯಂತ ಅವರ ಬೆಂಬಲಿಗರು ಮತ್ತು ಕಾರ್ಯಕರ್ತರು ಭಿನ್ನ ಶೈಲಿಯ ಅಭಿಯಾನ ಆರಂಭಿಸಿದ್ದಾರೆ. ಎಸ್.ಸಿ ಬಗಲೈ ಸಮುದಾಯದ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಬೇಕೆಂದು ಬಂಗಾರಪೇಟೆ ಕ್ಷೇತ್ರದಲ್ಲಿ ಬೆಂಬಲಿಗರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕರಿಗೆ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿ ಶ್ರೀಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ-ಹವನಗಳು ಹಾಗೂ ಹರಕೆಗಳನ್ನು ತೀರಿಸಲಾಗುತ್ತಿದೆ. ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕರೆ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯಲಿವೆ ಎಂಬುದು ಕಾರ್ಯಕರ್ತರ ಆಶಯವಾಗಿದೆ. ಹೈಕಮಾಂಡ್ ನಾಯಕರ ಮನವೊಲಿಕೆಯಲ್ಲಿ ಈ ಶಾಸಕರು ಯಶಸ್ವಿಯಾಗಲಿದ್ದಾರಾ ಮತ್ತು ಯಾರಿಗೆ ಅದೃಷ್ಟ ಒಲಿಯಲಿದೆ ಎಂಬ ಕುತೂಹಲ ಸದ್ಯ ಜಿಲ್ಲಾ ರಾಜಕಾರಣದಲ್ಲಿ ಮನೆಮಾಡಿದೆ.

