ಬೆಂಗಳೂರು: ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ(BJP) ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ(C.T. Ravi) ಅವರು, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು "ಎದೆ ಸೀಳಿದರೆ ಮೂರು ಅಕ್ಷರವೂ ಬರಲ್ಲ…" ಎಂದು ನೀಟ್ ಪ್ರತಿಭಟನೆಗೆ(NEET protest) ಸಂಬಂಧಿಸಿದಂತೆ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಈ ವಿವಾದಾತ್ಮಕ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC), ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ನ ಪೋಸ್ಟ್ನಲ್ಲಿ ಏನಿದೆ?
ಕಾಂಗ್ರೆಸ್ ತನ್ನ ಅಧಿಕೃತ 'ಎಕ್ಸ್' (X) ಖಾತೆಯಲ್ಲಿ ಸಿ.ಟಿ. ರವಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, "ಎದೆ ಸೀಳಿದರೆ ಕಾಣಬೇಕಾದದ್ದು ಅಕ್ಷರವಲ್ಲ, ಪ್ರೀತಿ, ವಾತ್ಸಲ್ಯ, ಕರುಣೆ, ಮತ್ತು ಇತರರ ಬಗ್ಗೆ ಸಹನೆ ಹಾಗೂ ಸೌಹಾರ್ದತೆ…" ಎಂದು ಮಾರ್ಮಿಕವಾಗಿ ತಿರುಗೇಟು ನೀಡಿದೆ. ಅಲ್ಲದೆ, ಶಾಸಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಸಮಾಜದಲ್ಲಿ ಸೌಹಾರ್ದತೆಯನ್ನು ಹಾಳುಮಾಡುವಂತಹ ನಿಂದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
ಪ್ರಕರಣದ ಹಿನ್ನೆಲೆ
ನೀಟ್ ಪರೀಕ್ಷಾ ಅಕ್ರಮದ ಕುರಿತು ನಡೆಯುತ್ತಿದ್ದ ಹೋರಾಟದ ವೇಳೆ ಸಿ.ಟಿ. ರವಿ ಅವರು ಆಕ್ಷೇಪಾರ್ಹ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಮಿಯಾ ಸಮಿತಿ ಮತ್ತು ಕಾಂಗ್ರೆಸ್ ನಾಯಕರ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ನೋಟಿಸ್ ನೀಡಲು ತೆರಳಿದ್ದ ವೇಳೆ ಹೈಡ್ರಾಮಾವೇ ನಡೆದಿತ್ತು.
ಸಿ.ಟಿ. ರವಿ ಸಮರ್ಥನೆ
ತಮ್ಮ ಭಾಷಣದ ಬಗ್ಗೆ ಸ್ಪಷ್ಟನೆ ನೀಡಿದ್ದ ಸಿ.ಟಿ. ರವಿ, ತಮ್ಮ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

