ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್ ಬಸ್ಗಳಿಂದ (EV Buses) ಸಾಲು ಸಾಲು ಅಪಘಾತಗಳು (accident) ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಚಾಲಕರ ನಿರ್ಲಕ್ಷ್ಯ ಹಾಗೂ ತಾಂತ್ರಿಕ ಕಾರಣಗಳಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಇಲಾಖೆ, ಹೊಸ ಇವಿ ಬಸ್ಗಳ ಖರೀದಿಗೆ ಸದ್ಯಕ್ಕೆ ತಾತ್ಕಾಲಿಕ ತಡೆ ನೀಡಿದೆ.
ಇವಿ ಬಸ್ಗಳಿಂದ ಉಂಟಾಗುತ್ತಿರುವ ಅವಾಂತರಗಳ ಕುರಿತು ಮಾಜಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಸೂಕ್ತ ದಾಖಲೆಗಳ ಸಮೇತ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆದಿದ್ದರು. ಆದಾಗ್ಯೂ, ಈ ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಸಿಗದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವೇ ಈಗ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹೊಸ ಎಲೆಕ್ಟ್ರಿಕ್ ಬಸ್ಗಳ ಖರೀದಿಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿದೆ. ಪದೇ ಪದೇ ಮರುಕಳಿಸುತ್ತಿರುವ ಈ ಅಪಘಾತಗಳಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಾರಿಗೆ ಇಲಾಖೆ ಮುಂದಾಗಿದೆ. ಸಚಿವರ ಸೂಚನೆಯ ಮೇರೆಗೆ, ನಗರದಲ್ಲಿ ಪ್ರಸ್ತುತ ಸಂಚರಿಸುತ್ತಿರುವ ಇವಿ ಬಸ್ಗಳ ಕಾರ್ಯಕ್ಷಮತೆ ಮತ್ತು ಸುರಕ್ಷತೆಯ ಬಗ್ಗೆ ಸಮಗ್ರ ಅಧ್ಯಯನ ನಡೆಸುವಂತೆ ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ಆದೇಶಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ರಾಜ್ಯ ಸಾರಿಗೆ ಸಂಸ್ಥೆಗೆ ಮತ್ತೆ ಹೊಸ ಇವಿ ಬಸ್ಗಳನ್ನು ಸೇರ್ಪಡೆಗೊಳಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಬಸ್ ಖರೀದಿ ಪ್ರಕ್ರಿಯೆಗೆ ಸದ್ಯಕ್ಕೆ ಹಿನ್ನಡೆಯಾಗಿದೆ. ತಜ್ಞರ ತಂಡ ನಡೆಸುವ ಈ ಅಧ್ಯಯನದ ವರದಿ ಕೈ ಸೇರಿದ ನಂತರವಷ್ಟೇ, ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಇದನ್ನೂ ಓದಿ: BOMB THREAT : ಎಕ್ಸ್ಪ್ರೆಸ್ ರೈಲಿಗೆ ಬಾಂಬ್ ಕರೆ, ಕೋಲಾರದಲ್ಲಿ ಬೆಚ್ಚಿಬಿದ್ದ ಪ್ರಯಾಣಿಕರು!

