ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಯಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಆಡಳಿತವನ್ನು ವಿಕೇಂದ್ರೀಕರಿಸಿ ಬೆಂಗಳೂರಿನ (Bengaluru) ಜನರಿಗೆ ಇನ್ನಷ್ಟು ಜನಸ್ನೇಹಿ ಆಡಳಿತ ಒದಗಿಸುವ ಉದ್ದೇಶದಿಂದ ಒಂದು ವರ್ಷದ ಹಿಂದೆ ಐದು ನಗರ ಪಾಲಿಕೆಗಳನ್ನು ರಚಿಸಲಾಗಿತ್ತು.
ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (Cm Dk Shivakumar) ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ (Social Media Post) ಹಂಚಿಕೊಂಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಒಂದು ವರ್ಷದ ಪಯಣವನ್ನು ಉಲ್ಲೇಖಿಸಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಆಡಳಿತ ವಿಕೇಂದ್ರೀಕರಣ ಪ್ರಮುಖ ಹೆಜ್ಜೆಯಾಗಿದ್ದು, ಐದು ನಗರ ಪಾಲಿಕೆಗಳ ರಚನೆಯಿಂದ ಸ್ಥಳೀಯ ಮಟ್ಟದಲ್ಲೇ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಅವಕಾಶ ಸಿಕ್ಕಿದೆ ಎಂದು ತಿಳಿಸಿದ್ದಾರೆ. ನಗರದ ವಿವಿಧ ಭಾಗಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವ ಮೂಲಕ ಬೆಂಗಳೂರಿನ ಅಭಿವೃದ್ಧಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲು ಸಾಧ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಅಭಿವೃದ್ಧಿ ಪಯಣ ಇನ್ನಷ್ಟು ವೇಗ ಪಡೆಯಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಭವಿಷ್ಯದ ಬೆಂಗಳೂರನ್ನು ಜನಸ್ನೇಹಿ, ಸುಗಮ ಹಾಗೂ ಅಭಿವೃದ್ಧಿ ಹೊಂದಿದ ನಗರವನ್ನಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ನಾಗರಿಕರು ಸೇರಿದಂತೆ ಎಲ್ಲರೂ ಕೈಜೋಡಿಸಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ಮೂಲಸೌಕರ್ಯ, ಸಂಚಾರ, ಕಸ ನಿರ್ವಹಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಮಗ್ರ ಯೋಜನೆಗಳ ಅಗತ್ಯವಿದೆ. ಆಡಳಿತ ವಿಕೇಂದ್ರೀಕರಣದ ಮೂಲಕ ಈ ಸವಾಲುಗಳಿಗೆ ಸ್ಥಳೀಯ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮುಂದುವರಿಯಲಿದೆ.

