ಬೆಂಗಳೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದ ಯುವಕನೊಬ್ಬನ ಆತ್ಮಹತ್ಯೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (High Court) ವಜಾಗೊಳಿಸಿದ್ದು, ಕೃಷ್ಣ ಅವರಿಗೆ ಎಚ್ಚರಿಕೆಯನ್ನ ಸಹ ನೀಡಿದೆ.
ಅರ್ಜಿ ಪುರಸ್ಕರಿಸಲು ಒಪ್ಪದ ಕೋರ್ಟ್ ವಿಚಾರಣೆ ನಡೆಸಿದ ನ್ಯಾಯಾಲಯವು, ಈ ಪ್ರಕರಣದಲ್ಲಿ ಅರ್ಜಿದಾರರು ಮೂರನೇ ವ್ಯಕ್ತಿಯಾಗಿದ್ದು, ಅವರಿಗೆ ಈ ಕೇಸಿಗೂ ಯಾವುದೇ ನೇರ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳೇ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಕಾನೂನಿನಲ್ಲಿ ಅವಕಾಶವಿದೆ. ಬಾದಿತರಾದವರು ಸುಮ್ಮನಿರುವಾಗ, ಸಂಬಂಧವಿಲ್ಲದ ಮೂರನೇ ವ್ಯಕ್ತಿಗಳು ತನಿಖೆಯ ಮೇಲ್ವಿಚಾರಣೆ ಅಥವಾ ಮರುತನಿಖೆ ಕೋರಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇಂತಹ ಅರ್ಜಿಗಳನ್ನು ಪುರಸ್ಕರಿಸಿದರೆ ಕ್ರಿಮಿನಲ್ ನ್ಯಾಯದಾನ ಪ್ರಕ್ರಿಯೆಯಲ್ಲಿ ಅನಗತ್ಯ ಹಸ್ತಕ್ಷೇಪಕ್ಕೆ ಹಾದಿ ಮಾಡಿಕೊಟ್ಟಂತಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಕೃಷ್ಣ ಅವರನ್ನ ತರಾಟೆಗೆ ತೆಗೆದುಕೊಂಡ ಕೋರ್ಟ್
ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ರಕ್ಷಿತ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿ ಸರಿಯಾಗಿಲ್ಲ. ಈ ಪ್ರಕರಣದಲ್ಲಿ ಅಮಾಯಕರನ್ನು ಸಿಲುಕಿಸಲಾಗಿದೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಡಿಜಿಪಿ ಅವರಿಗೆ ಮರುತನಿಖೆಗೆ ನಿರ್ದೇಶಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ, ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠವು ಈ ಅರ್ಜಿಯನ್ನು ಪುರಸ್ಕರಿಸಲು ನಿರಾಕರಿಸಿದೆ.
ಸ್ನೇಹಮಯಿ ಕೃಷ್ಣ ಅವರ ಈ ಅರ್ಜಿಯು ನ್ಯಾಯಾಲಯದ ವಿಶೇಷ ವ್ಯಾಪ್ತಿಯ ದುರ್ಬಳಕೆಯಾಗಿದೆ ಎಂದು ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಅರ್ಜಿಗಳಿಂದ ಸಾಂವಿಧಾನಿಕ ನ್ಯಾಯಾಲಯಗಳ ಹೊರೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಮೊತ್ತದ ದಂಡ ವಿಧಿಸಬಹುದಾಗಿದ್ದರೂ, ಅರ್ಜಿದಾರರಿಗೆ ಮುಂದೆ ಇಂತಹ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿ ಅರ್ಜಿ ವಜಾಗೊಳಿಸಲಾಗಿದೆ.

