ಬೆಂಗಳೂರು: ರಾಜ್ಯದ ಅನಿವಾಸಿ ಭಾರತೀಯರ (nri) ಅನುಕೂಲಕ್ಕಾಗಿ ಹೊಸದಾಗಿ ಪ್ರತ್ಯೇಕ ಸಚಿವಾಲಯವನ್ನು (Ministry) ಆರಂಭಿಸುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಗುರುವಾರ (ಜುಲೈ 2) ನಡೆದ ಸಚಿವ ಸಂಪುಟ ಸಭೆಯಲ್ಲಿ 'ಜಾಗತಿಕ ಹೂಡಿಕೆ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ' ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮಂಡಿಸಲಾಯಿತಾದರೂ, ಅಂತಿಮ ನಿರ್ಧಾರವನ್ನು ಸದ್ಯಕ್ಕೆ ಮುಂದೂಡಲಾಗಿದೆ.
ಹೊಸ ಸಚಿವಾಲಯದ ಸ್ಥಾಪನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಅಂತಿಮವಾಗಿ, ಉಪಮುಖ್ಯಮಂತ್ರಿಯೂ ಆಗಿರುವ ಕಂದಾಯ ಸಚಿವ ಜಿ. ಪರಮೇಶ್ವರ್ (G Parameshwara) ಅವರ ನೇತೃತ್ವದಲ್ಲಿ ನಾಲೈದು ಸಚಿವರನ್ನೊಳಗೊಂಡ ವಿಶೇಷ ಸಮಿತಿಯೊಂದನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಸಚಿವರ ಉಪಸಮಿತಿಯು ಹೊಸ ಇಲಾಖೆಯ ಅಗತ್ಯತೆ ಹಾಗೂ ಅದರ ಕಾರ್ಯವ್ಯಾಪ್ತಿಯ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಲಿದೆ. ಮುಂದಿನ ಸಚಿವ ಸಂಪುಟ ಸಭೆಗಿಂತ ಮುಂಚಿತವಾಗಿ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಸಮಿತಿ ನೀಡುವ ವರದಿ ಮತ್ತು ಅದರಲ್ಲಿನ ಶಿಫಾರಸುಗಳನ್ನು ಆಧರಿಸಿ, ಹೊಸ ಸಚಿವಾಲಯ ಸ್ಥಾಪಿಸುವ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆ ನಿರ್ಣಯಿಸಿದೆ. ವಿದೇಶದಲ್ಲಿರುವ ಕನ್ನಡಿಗರು ಹಾಗೂ ಜಾಗತಿಕ ಹೂಡಿಕೆದಾರರೊಂದಿಗೆ ಉತ್ತಮ ಸಮನ್ವಯ ಸಾಧಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸದ್ಯಕ್ಕೆ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ಇಲಾಖೆಯ ಹಲವು ಕಾರ್ಯಗಳು ಕೈಗಾರಿಕೆ, ಐಟಿ-ಬಿಟಿ ಹಾಗೂ ಇತರ ಇಲಾಖೆಗಳ ವ್ಯಾಪ್ತಿಯಲ್ಲಿರುವುದರಿಂದ ಅದರ ಕಾರ್ಯವ್ಯಾಪ್ತಿಯನ್ನು ಸ್ಪಷ್ಟಪಡಿಸುವ ಅಗತ್ಯವಿದೆ. ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಅಗತ್ಯ ಬಗ್ಗೆ ಸಚಿವರು ಸುದೀರ್ಘ ಚರ್ಚೆ ನಡೆಸಿದರು. ಇಲಾಖೆಯ ಅಗತ್ಯತೆ, ಕಾರ್ಯವ್ಯಾಪ್ತಿ ಬಗ್ಗೆ ಪರಿಶೀಲನೆ ಅಗತ್ಯ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಅನಿವಾಸಿ ಭಾರತೀಯರಿಗಾಗಿ (ಎನ್ಆರ್ಐ) ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಮಂಡಿಸಲಾದ 'ಜಾಗತಿಕ ಹೂಡಿಕೆ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ' ಸ್ಥಾಪನೆಯ ಪ್ರಸ್ತಾವನೆಗೆ ಸದ್ಯಕ್ಕೆ ತಡೆ ಬಿದ್ದಿದ್ದು, ಹಿರಿಯ ಸಚಿವರ ಸಮಿತಿಗೆ ಒಪ್ಪಿಸಲಾಗಿದೆ. : HEMAVATHI: ಮಲೆನಾಡಿನಲ್ಲಿ ವರುಣನ ಅಬ್ಬರ: ಹೇಮಾವತಿ ಜಲಾಶಯಕ್ಕೆ ಭಾರಿ ಒಳಹರಿವು

