ಕುಶಾಲನಗರ: ಕೊಡಗು(Kodagu) ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ(Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ(Kushalnagar) ವ್ಯಾಪ್ತಿಯಲ್ಲಿ ಹರಿಯುವ ಕಾವೇರಿ ನದಿ ನೀರಿನ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಚುರುಕಾಗಿರುವುದರಿಂದ ನದಿಗಳು ಮೈದುಂಬಿಕೊಳ್ಳುತ್ತಿವೆ. ಕಾವೇರಿ ಸೇತುವೆ ಬಳಿ 5 ಅಡಿ ನೀರು ಏರಿಕೆ ಕುಶಾಲನಗರದಲ್ಲಿ 205.69 ಮಿಮೀ ಮಳೆ ದಾಖಲು ಹಾರಂಗಿ ಜಲಾಶಯದ ಸ್ಥಿತಿ ಏನು?
ಕುಶಾಲನಗರ-ಕೊಪ್ಪ ಗಡಿ ಭಾಗದ ಕಾವೇರಿ ಸೇತುವೆಯ ಕೆಳ ಭಾಗದಲ್ಲಿ ಶುಕ್ರವಾರ ಸಂಜೆ ವೇಳೆಗೆ ನದಿ ನೀರಿನ ಮಟ್ಟ ಸುಮಾರು ಐದು ಅಡಿಗಳಷ್ಟು ಏರಿಕೆಯಾಗಿದೆ. ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ ಹಾಗೂ ತಲಕಾವೇರಿ ವ್ಯಾಪ್ತಿಯಲ್ಲಿ ಗುರುವಾರ 33.2 ಮಿಲಿ ಮೀಟರ್ ಪ್ರಮಾಣದ ಮಳೆಯಾಗಿದ್ದು, ನದಿಗೆ ಹೆಚ್ಚಿನ ನೀರು ಹರಿದುಬರುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕುಶಾಲನಗರ ಕಾವೇರಿ ಸೇತುವೆ ಕೆಳಗೆ ಬರೋಬ್ಬರಿ 23 ಅಡಿಗಳಷ್ಟು ಎತ್ತರದಲ್ಲಿ ನೀರು ಹರಿದು ನದಿ ತಟದ ನಿವಾಸಿಗಳಲ್ಲಿ ಪ್ರವಾಹದ ಆತಂಕ ಮೂಡಿಸಿತ್ತು.
ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಕುಶಾಲನಗರ ತಾಲೂಕಿನ ವ್ಯಾಪ್ತಿಯಲ್ಲಿ ಸರಾಸರಿ ಒಟ್ಟು 205.69 ಮಿಲಿ ಮೀಟರ್ ಮಳೆ ಸುರಿದಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಮಳೆಯ ಪ್ರಮಾಣ ತೀವ್ರ ಕುಸಿತ ಕಂಡಿದೆ. ಕಳೆದ ವರ್ಷ ಇದೇ ವೇಳೆಗೆ ಈ ಭಾಗದಲ್ಲಿ 796.54 ಮಿಲಿ ಮೀಟರ್ ಭಾರಿ ಮಳೆಯಾಗಿತ್ತು.
ಮಲೆನಾಡಿನಲ್ಲಿ ಮಳೆ ಚುರುಕಾಗಿರುವುದರಿಂದ ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಹೆಚ್ಚಾಗಿದೆ. ಶುಕ್ರವಾರ ಸಂಜೆ ವೇಳೆಗೆ ಜಲಾಶಯಕ್ಕೆ 1,113 ಕ್ಯೂಸೆಕ್ಸ್ ಪ್ರಮಾಣದ ನೀರಿನ ಒಳಹರಿವು ದಾಖಲಾಗಿದೆ. ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 3.3 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿಗಳಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2,853 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಆಗ ಜಲಾಶಯ ಬಹುತೇಕ ಭರ್ತಿಯಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗಿತ್ತು. ಸದ್ಯ ಮಳೆ ಹೀಗೆಯೇ ಮುಂದುವರಿದರೆ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಏರಿಕೆಯಾಗುವ ಸಾಧ್ಯತೆ ಇದೆ.

