ಬೆಂಗಳೂರು: ರಾಮನಗರ (Ramanagar ) ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣದ ಕಾವೇರಿ ಕ್ರಷರ್ಸ್ ಕಲ್ಲು ಕ್ವಾರಿಯಲ್ಲಿ (Stone crusher ) ಸಂಭವಿಸಿದ ಭೀಕರ ಬಂಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police )ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಭೀಕರ ದುರಂತದಲ್ಲಿ ಬಿಹಾರ ಮೂಲದ ಏಳು ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಗಣಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಅಕ್ರಮ ಗಣಿಗಾರಿಕೆಯೇ ಈ ದುರಂತಕ್ಕೆ ಕಾರಣ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಈ ಮೊತ್ತವನ್ನು ಕ್ವಾರಿ ಮಾಲೀಕರಿಂದಲೇ ವಸೂಲಿ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ತಾವರೆಕೆರೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಗಾತ್ರದ ಬಂಡೆಗಳು ಕುಸಿದು ಬಿದ್ದಿದ್ದು, ಕಲ್ಲುಗಳ ಅಡಿಯಲ್ಲಿ ಸಿಲುಕಿ ಕಾರ್ಮಿಕರು ಮೃತಪಟ್ಟಿದ್ದಾರೆ.

