ಗದಗ : ಸರ್ಕಾರಿ ಬಸ್ ಗಳ (Government bus) ಕಳಪೆ ನಿರ್ವಹಣೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಇತ್ತೀಚೆಗೆ ಕಲಬುರಗಿಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಬಸ್ ಚಲಾಯಿಸಿದ ಪ್ರಕರಣದ ಬೆನ್ನಲ್ಲೇ, ಗದಗದಲ್ಲಿ (Gadag) ಮತ್ತೊಂದು ಆತಂಕಕಾರಿ ಘಟನೆ ಜರುಗಿದೆ.
ಹಳೆ ಬಸ್ ನಿಲ್ದಾಣದಿಂದ ಹೊಸ ನಿಲ್ದಾಣದ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ನಲ್ಲಿ ತಾಂತ್ರಿಕ ದೋಷ (Break failure) ಕಾಣಿಸಿಕೊಂಡಿದ್ದು, ಪ್ರಯಾಣಿಕರು ಇಲ್ಲದ ಕಾರಣ ಒಂದು ದೊಡ್ಡ ದುರಂತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಇಳಿಜಾರು ಪ್ರದೇಶದಲ್ಲಿ ಬ್ರೇಕ್ ಕೆಲಸ ಮಾಡದ ಕಾರಣ, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಹಿಮ್ಮುಖವಾಗಿ ವೇಗವಾಗಿ ಚಲಿಸಲು ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ಬಸ್ ನ ಅಡಿಭಾಗದಲ್ಲಿ ವ್ಯಕ್ತಿಯೊಬ್ಬರು ಸಿಲುಕಿಕೊಂಡಿದ್ದು, ಸ್ಥಳೀಯರು ಕೂಡಲೇ ಎಚ್ಚೆತ್ತುಕೊಂಡು ಅವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಸ್ ನ ಅಪ್ಪಳಿಕೆಗೆ ಎರಡು ಬೈಕ್ ಗಳು ಸಂಪೂರ್ಣ ಜಖಂಗೊಂಡಿದ್ದು, ಘಟನೆಯ ಬಳಿಕ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಬಸ್ ನಲ್ಲಿ ಮೆಕಾನಿಕ್ ಒಬ್ಬರು ಇದ್ದರೂ ಕೂಡ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಅದೃಷ್ಟವಶಾತ್ ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್ ಬಸ್ ಗೆ ಅಡ್ಡಲಾಗಿ ನಿಂತ ಪರಿಣಾಮ, ಮತ್ತಷ್ಟು ಅನಾಹುತ ಸಂಭವಿಸುವುದು ತಪ್ಪಿದೆ. ಈ ಘಟನೆಯು ಗದಗ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಸಾರ್ವಜನಿಕರ ಸುರಕ್ಷತೆಗೆ ಸವಾಲಾಗಿ ಪರಿಣಮಿಸಿದ್ದು, ಸಾರಿಗೆ ಇಲಾಖೆಯು ಬಸ್ ಗಳ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

