ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ (Karnataka Politics) ತೀವ್ರ ಸಂಚಲನ ಮೂಡಿಸಿರುವ ನಾಯಕತ್ವ ಬದಲಾವಣೆ (Cm Change Row) ಹಾಗೂ ರಾಜೀನಾಮೆ ವದಂತಿಗಳ ಹೈಡ್ರಾಮಾ ಅಂತಿಮ ಘಟ್ಟಕ್ಕೆ ತಲುಪಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಇಂದು ಮಧ್ಯಾಹ್ನ ತುರ್ತು ಪತ್ರಿಕಾಗೋಷ್ಠಿ (Press meet) ಕರೆದಿದ್ದಾರೆ.
ಮುಖ್ಯಮಂತ್ರಿಗಳು ಇಂದು ಮಧ್ಯಾಹ್ನ 2:30ಕ್ಕೆ ಸರಿಯಾಗಿ ಲೋಕ ಭವನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿನ ಪ್ರಮುಖ ಪ್ರಕ್ರಿಯೆಗಳನ್ನು ಮುಗಿಸಿಕೊಂಡು, ನಂತರ ಮಧ್ಯಾಹ್ನ 3:00 ಗಂಟೆಗೆ ತಮ್ಮ ಅಧಿಕೃತ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಪಾಳಯದಲ್ಲಿ ನಡೆದಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು, ಹೈಕಮಾಂಡ್ ನಾಯಕರ ಭೇಟಿ ಹಾಗೂ ಸಚಿವರ ಉಪಹಾರ ಕೂಟದ ಬೆನ್ನಲ್ಲೇ ಈ ಪತ್ರಿಕಾಗೋಷ್ಠಿ ಆಯೋಜನೆಗೊಂಡಿರುವುದು ಭಾರಿ ಕುತೂಹಲ ಮೂಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ಈ ಪತ್ರಿಕಾಗೋಷ್ಠಿಯಲ್ಲಿ ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆಯೇ ಅಥವಾ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ದೊಡ್ಡ ಘೋಷಣೆ ಮಾಡಲಿದ್ದಾರೆಯೇ ಎಂಬ ಚರ್ಚೆಗಳು ಶುರುವಾಗಿವೆ. ಸದ್ಯ ಇಡೀ ರಾಜ್ಯದ ಗಮನ ಈಗ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದತ್ತ ನೆಟ್ಟಿದೆ.

