ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ (SIR) ಭಾರೀ ಅಕ್ರಮಗಳು ಸಂಭವಿಸುತ್ತಿವೆ ಎಂದು ಆರೋಪಿಸಿ ಬಿಜೆಪಿ (Bjp) ಹಾಗೂ ಜೆಡಿಎಸ್ (Jds) ಮೈತ್ರಿಕೂಟದ ಪ್ರಮುಖ ನಾಯಕರು ಕೇಂದ್ರ ಚುನಾವಣಾ ಆಯೋಗದ ಕದ ತಟ್ಟಿದ್ದಾರೆ.
ನಿಯಮಾವಳಿಗಳ ಪ್ರಕಾರ ಮತದಾರರ ಪಟ್ಟಿಯನ್ನು ಸರಿಪಡಿಸುವ ಕೆಲಸಕ್ಕೆ ರಾಜ್ಯ ಸರ್ಕಾರವೇ ಅಡ್ಡಿಪಡಿಸುತ್ತಿದೆ ಎಂದು ನಾಯಕರು ದೂರಿದ್ದಾರೆ. ಖಾನ್, ಅಬ್ದುಲ್, ಕರೀಮ್ ಸೇರಿದಂತೆ ಮುಸ್ಲಿಂ ಸಮುದಾಯದ (Muslims) ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಪಟ್ಟಿಯಿಂದ ತೆಗೆದುಹಾಕದಂತೆ ಅಧಿಕಾರಿಗಳ ಮೇಲೆ ಮೌಖಿಕವಾಗಿ ತೀವ್ರ ಒತ್ತಡ ಹೇರಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ವಿಪಕ್ಷ ನಾಯಕ ಆರ್.ಅಸ್ಗೋಕ್ ಮಾಡಿದ್ದಾರೆ. ಈ ಕುರಿತು ಚರ್ಚಿಸಲು ದೆಹಲಿಗೆ ತೆರಳಿದ್ದ ಆರ್. ಅಶೋಕ್, ಪ್ರಹ್ಲಾದ್ ಜೋಶಿ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಎಸ್. ಸೋಮಶೇಖರ್ ಒಳಗೊಂಡ ನಿಯೋಗ ಮುಖ್ಯ ಚುನಾವಣಾ ಆಯುಕ್ತರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದೆ. ಮರಣ ಹೊಂದಿದವರು, ಬೇರೆಡೆಗೆ ವಲಸೆ ಹೋದವರು ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಚುನಾವಣಾ ಆಯೋಗದ ಸ್ಪಷ್ಟ ಮಾರ್ಗಸೂಚಿಗಳಿವೆ. ಆದರೆ, ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರ ಈ ಎಲ್ಲ ನೀತಿ-ನಿಯಮಗಳನ್ನು ಗಾಳಿಗೆ ತೂರಿ ತನಗೆ ಅನುಕೂಲವಾಗುವಂತೆ ವರ್ತಿಸುತ್ತಿದೆ ಎಂದು ನಿಯೋಗ ಆಕ್ರೋಶ ವ್ಯಕ್ತಪಡಿಸಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆ ಹಾಗೂ ಅಧಿಕಾರ ದುರ್ಬಳಕೆಯ ತಂತ್ರಗಳ ವಿರುದ್ಧವೂ ನಾಯಕರು ತೀವ್ರ ಆತಂಕ ಹೊರಹಾಕಿದ್ದಾರೆ. ವಿರೋಧಪಕ್ಷಗಳ ಈ ದೂರನ್ನು ಗಂಭೀರವಾಗಿ ಸ್ವೀಕರಿಸಿರುವ ಕೇಂದ್ರ ಚುನಾವಣಾ ಆಯೋಗ, ಮತದಾರರ ಪಟ್ಟಿ ಪರಿಷ್ಕರಣೆಯ ನಿಯಮಗಳನ್ನು ಉಲ್ಲಂಘಿಸುವ ಅಧಿಕಾರಿಗಳು ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. ಯಾವುದೇ ಅಕ್ರಮಗಳಿಗೆ ಆಸ್ಪದ ನೀಡದೆ ಕೇವಲ ಅರ್ಹ ಮತದಾರರನ್ನು ಒಳಗೊಂಡ ನ್ಯಾಯಸಮ್ಮತವಾದ ಪಟ್ಟಿಯನ್ನು ಸಿದ್ಧಪಡಿಸಬೇಕೆಂದು ಉಭಯ ಪಕ್ಷಗಳು ಒತ್ತಾಯಿಸಿವೆ.

