ಮೈಸೂರು : ಟಿ. ನರಸೀಪುರ ಗಣೇಶ ಮೆರವಣಿಗೆ ವಿಚಾರವಾಗಿ ಉಂಟಾಗಿರುವ ವಿವಾದದ ನಡುವೆಯೇ, ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧನಂಜಯ್ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.
"We Stand With Inspector" ಎಂಬ ಸಂದೇಶದೊಂದಿಗೆ ಹಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದು, ಇನ್ಸ್ಪೆಕ್ಟರ್ ಧನಂಜಯ್ ಅವರ ಕರ್ತವ್ಯ ನಿರ್ವಹಣೆಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಗಣೇಶ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಕೈಗೊಂಡ ಕ್ರಮ ಹಾಗೂ ಬಳಸಿದ ಪೊಲೀಸ್ ಭಾಷೆಯನ್ನು ಕೆಲವರು ವಿವಾದದ ರೂಪದಲ್ಲಿ ಬಿಂಬಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ನೆಟ್ಟಿಗರು, "ಪೊಲೀಸ್ ಭಾಷೆಯೇ ಹಾಗೆ. ಸುಖಾಸುಮ್ಮನೆ ಇದನ್ನು ವಿವಾದ ಮಾಡಲಾಗುತ್ತಿದೆ" ಎಂದು ಪೋಸ್ಟ್ಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಇನ್ನೂ ಕೆಲವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಜವಾಬ್ದಾರಿಯಾಗಿದ್ದು, ಕರ್ತವ್ಯ ನಿರ್ವಹಿಸುವಾಗ ಪೊಲೀಸರು ಕೈಗೊಳ್ಳುವ ಕ್ರಮಗಳಿಗೆ ರಾಜಕೀಯ ಬಣ್ಣ ನೀಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
"ಪೊಲೀಸರ ಕೆಲಸವನ್ನು ಪೊಲೀಸರು ಮಾಡಲು ಬಿಡಿ" ಎಂಬ ಸಂದೇಶಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಗಣೇಶ ಮೆರವಣಿಗೆ ವಿವಾದದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಯ ಪರವಾಗಿ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿರುವ ಬೆಂಬಲ ಇದೀಗ ಗಮನ ಸೆಳೆಯುತ್ತಿದೆ.
ಒಂದೆಡೆ ಪೊಲೀಸ್ ಕ್ರಮದ ಕುರಿತು ಪರ-ವಿರೋಧದ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಇನ್ಸ್ಪೆಕ್ಟರ್ ಧನಂಜಯ್ ಪರ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಈ ಅಭಿಯಾನವು ಟಿ. ನರಸೀಪುರದ ಗಣೇಶ ಮೆರವಣಿಗೆ ವಿವಾದಕ್ಕೆ ಮತ್ತೊಂದು ಆಯಾಮ ನೀಡಿದೆ.

