Dailyhunt
ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ: ಪವನ್ ಕಲ್ಯಾಣ್ ಹೇಳಿದ್ದೇನು?

ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ: ಪವನ್ ಕಲ್ಯಾಣ್ ಹೇಳಿದ್ದೇನು?

ಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿರುವುದಕ್ಕೆ ಜನಸೇನಾ ಪಕ್ಷದ ಅಧ್ಯಕ್ಷ, ನಟ ಪವನ್ ಕಲ್ಯಾಣ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಚಂದ್ರಬಾಬು ನಾಯ್ಡು ಅವರ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ದುರದೃಷ್ಟಕರ. ಇಂದು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ ರೀತಿ ನೋವುಂಟು ಮಾಡಿದೆ. ಇದನ್ನು ನಾವು ಬಹಿರಂಗವಾಗಿ ವಿರೋಧಿಸುತ್ತೇವೆ. ಆಡಳಿತ ಪಕ್ಷದ ಕೈಗೊಂಬೆಯಂತೆ ಅಧಿಕಾರಿಗಳು ವರ್ತಿಸುತ್ತಿರುವುದು ತೀವ್ರ ಖಂಡನೀಯ' ಎಂದು ತಿಳಿಸಿದ್ದಾರೆ.

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ನಾಯ್ಡು ಅವರನ್ನು ನಂದ್ಯಾಲದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಆಂಧ್ರ ಪ್ರದೇಶದ ಸಿಐಡಿ ಪೊಲೀಸರು ಇಂದು (ಶನಿವಾರ) ಬೆಳಿಗ್ಗೆ 6 ಗಂಟೆಗೆ ಬಂಧಿಸಿದ್ದಾರೆ.

ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ನಾಯ್ಡು ಅವರನ್ನು ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ವಿಜಯವಾಡಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅನ್ವಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾಯ್ಡು ಅವರ ಬಂಧನವನ್ನೂ ಸುದ್ದಿಸಂಸ್ಥೆ 'ಎಎನ್‌ಐ' ಖಚಿತಪಡಿಸಿದೆ.

ಏತನ್ಮಧ್ಯೆ ನಾಯ್ಡು ಅವರನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಟಿಡಿಪಿ ಆರೋಪಿಸಿದೆ. ಈ ಪ್ರಕರಣ ಇದೀಗ ವೈಎಸ್‌ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ನಡುವೆ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ನಾಯ್ಡು ಬಂಧನದ ಬಗ್ಗೆ ಇದುವರೆಗೆ ಸಿಎಂ ಜಗನ್ ಮೋಹನ್ ರೆಡ್ಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇವನ್ನೂ ಓದಿ...

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ಏತಕ್ಕಾಗಿ ಚಂದ್ರಬಾಬು ನಾಯ್ಡು ಬಂಧನ? ಆಂಧ್ರ ಮಾಜಿ ಸಿಎಂಗೆ ಸಂಕಷ್ಟ

Dailyhunt
Disclaimer: This content has not been generated, created or edited by Dailyhunt. Publisher: Prajavani