ಬೆಂಗಳೂರು: ಸ್ವಚ್ಛತೆ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಐದೂ ನಗರ ಪಾಲಿಕೆಗಳ ಆಯುಕ್ತರಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಶುಕ್ರವಾರ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು ತಮ್ಮ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ತ್ಯಾಜ್ಯವನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು.
ಅಗತ್ಯ ಸ್ವಚ್ಛತಾ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಬೇಕು' ಎಂದು ನಿರ್ದೇಶನ ನೀಡಿದರು.
'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ ದಿನದಿಂದ ದಿನಕ್ಕೆ ಮತ್ತಷ್ಟು ವೇಗ ಪಡೆದುಕೊಳ್ಳುತ್ತಿದೆ. ಆಗಸ್ಟ್ 1ರಿಂದ 6ರವರೆಗೆ 453 ಸಾರ್ವಜನಿಕ ಸ್ಥಳಗಳಿಂದ 10,056 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯವನ್ನು (ಸಿ ಆಯಂಡ್ ಡಿ ತ್ಯಾಜ್ಯ) ತೆರವುಗೊಳಿಸಲಾಗಿದೆ. ಇದೇ ರೀತಿಯಲ್ಲಿ ಇತರೆ ಇಲಾಖೆಗಳು ಕೈಗೊಂಡಿರುವ ಸ್ವಚ್ಛತಾ ಕಾರ್ಯಗಳ ಮಾಹಿತಿಯನ್ನೂ ಸಂಗ್ರಹಿಸಬೇಕು. ತ್ಯಾಜ್ಯ ತೆರವು ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂಬುದು ನಾಗರಿಕರಿಗೆ ಅರಿವಾಗುವ ರೀತಿಯಲ್ಲಿ ಕೆಲಸ ಮಾಡಬೇಕು' ಎಂದರು.
ಅಭಿಯಾನದ ಆರಂಭಿಕ ಹಂತದಲ್ಲಿ ಕೆಲವು ಸಮಸ್ಯೆಗಳು ಎದುರಾಗುವುದು ಸಹಜ. ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಅವುಗಳಿಗೆ ತ್ವರಿತ ಪರಿಹಾರ ಕಂಡುಹಿಡಿದು, ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಸ್ವಚ್ಛತಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಬೇಕು ಎಂದು ತಿಳಿಸಿದರು.
ಮಳೆಯ ಸಮಯದಲ್ಲಿ ಕ್ವಾರಿಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಟ್ಟಡ ನಿರ್ಮಾಣದ ಭಗ್ನಾವಶೇಷಗಳನ್ನು ಸರ್ಕಾರ ಗುರುತಿಸಿರುವ ನಿಗದಿತ ಸ್ಥಳಗಳಲ್ಲಿಯೇ ವಿಲೇವಾರಿ ಮಾಡಬೇಕು. ಸ್ವಚ್ಛಗೊಳಿಸಿದ ಸ್ಥಳಗಳಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
'ಸಿ ಆಯಂಡ್ ಡಿ ತ್ಯಾಜ್ಯ ವಿಲೇವಾರಿ ಮಾಡುವ ನಿಗದಿತ ಸ್ಥಳಗಳಲ್ಲಿ ಮೇಲ್ವಿಚಾರಣೆಗಾಗಿ ಮಾರ್ಷಲ್ಗಳನ್ನು ನಿಯೋಜಿಸಲಾಗಿದ್ದು, ಅವರಿಗೆ ಶೆಲ್ಟರ್, ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ, ಟಿಪ್ಪರ್ ವಾಹನಗಳ ಆಗಮನ ಮತ್ತು ನಿರ್ಗಮನದ ವಿವರಗಳನ್ನು ರಿಜಿಸ್ಟರ್ನಲ್ಲಿ ಸಮರ್ಪಕವಾಗಿ ದಾಖಲಿಸಬೇಕು' ಎಂದರು.
ಪ್ರಸ್ತುತ 54 ಟಿಪ್ಪರ್ 18 ಜೆಸಿಬಿ ವಾಹನದ ಮೂಲಕ ಐದೂ ನಗರ ಪಾಲಿಕೆಗಳಲ್ಲಿ ತ್ಯಾಜ್ಯ ತೆರವುಗೊಳಿಸಲಾಗುತ್ತಿದ್ದು, ಟಿಪ್ಪರ್ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಅದರ ಜೊತೆಗೆ ಅವಶ್ಯಕತೆಯಿರುವ ಜೆಸಿಬಿ, ಟ್ರ್ಯಾಕ್ಟರ್, ಹಿಟಾಚಿಗಳನ್ನು ಕೂಡಾ ಸಮರ್ಪಕವಾಗಿ ಬಳಸಿಕೊಳ್ಳಲು ನಿರ್ದೇಶನ ನೀಡಿದರು.
'ಸಂಚಾರ ಪೊಲೀಸ್ ವಿಭಾಗದ ಅಧಿಕಾರಿಗಳು ಬೆಳಿಗ್ಗೆ 7ರಿಂದ 10ರವರೆಗೆ ಹಾಗೂ ಸಂಜೆ 5ರಿಂದ 9ರವರೆಗೆ ತ್ಯಾಜ್ಯ ತೆರವುಗೊಳಿಸುತ್ತಿರುವ ಟಿಪ್ಪರ್ ವಾಹನಗಳ ಸಂಚಾರಕ್ಕೆ ಅನುಮತಿ ನೀಡುತ್ತಿಲ್ಲ. ಇದರಿಂದ ತ್ಯಾಜ್ಯ ತೆರವು ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಈ ಸಂಬಂಧ ಜಿಬಿಎ ಮುಖ್ಯ ಆಯುಕ್ತರು ಸಂಚಾರ ಪೊಲೀಸ್ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನದಲ್ಲಿ ಕಾರ್ಯನಿರ್ವಹಿಸುವ ವಾಹನಗಳಿಗೆ ಎಲ್ಲಾ ಸಮಯದಲ್ಲಿಯೂ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಬೇಕು' ಎಂದು ಸಚಿವರು ಸೂಚಿಸಿದರು.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ನಿರ್ದೇಶನದಂತೆ ರೈಲ್ವೆ ಇಲಾಖೆಯ ಜಮೀನುಗಳಲ್ಲಿ ಸ್ವಚ್ಛತಾ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ಆರಂಭವಾಗಿಲ್ಲ. ಈ ಸಂಬಂಧ ಮುಖ್ಯ ಆಯುಕ್ತರು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಕಾರ್ಯವನ್ನು ತ್ವರಿತಗೊಳಿಸುವಂತೆ ಸೂಚಿಸಿದರು.


