ಧಾರವಾಡ: 'ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗುವ ಸಂಭವ ಇದೆ. ಕಾಲುವೆ ಮತ್ತು ಕೆರೆಗಳಲ್ಲಿನ ನೀರು ಸಂರಕ್ಷಣೆ ಮಾಡಬೇಕು' ಎಂದು ತಹಶೀಲ್ದಾರ್ಗಳು, ಕಾರ್ಯನಿರ್ವಾಹಕಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಿಡಿಯೊ ಸಂವಾದದ ಮೂಲಕ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
'ಕಾಲುವೆ, ಕೆರೆ ನೀರನ್ನು ಇತರ ಚಟುವಟಿಕೆಗಳಿಗೆ ಬಳಸದಂತೆ ಜಾಗ್ರತೆ ವಹಿಸಬೇಕು. ನೀರಿನ ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು. ಹೊಸ ಕೊಳವೆ ಬಾವಿ ಕೊರೆಸಲು ಅನುಮತಿ ನೀಡಬಾರದು. ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ವಹಿಸಬೇಕು' ಎಂದು ಸೂಚಿಸಿದರು.
'ಮಳೆ ಮಾಪಕಗಳನ್ನು (ರೇನ್ ಗೇಜ್) ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ನಿಗಾ ವಹಿಸಬೇಕು. ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಬೆಳೆವಿಮೆ ಕುರಿತು ಮಾಹಿತಿ ನೀಡಬೇಕು. ಪ್ರತಿಯೊಬ್ಬ ರೈತರು ಬೆಳೆ ವಿಮೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು' ಎಂದು ಹೇಳಿದರು.
'ಜಿಲ್ಲೆಯಲ್ಲಿ ಚಿಕೂನ್ ಗುನ್ಯಾ, ಮಲೇರಿಯಾ ಇತರ ಸಾಂಕ್ರಾಮಿಕ ರೋಗಳ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಸ್ ನಿಲ್ದಾಣಗಳು, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು' ಎಂದರು.
'ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಪ್ರತಿ ತಿಂಗಳು ದೇವಾಲಯಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. ದೇವಾಲಯಗಳ ಅಭಿವೃದ್ಧಿಯ ಬಗ್ಗೆ ಯೋಜನೆಯನ್ನು ರೂಪಿಸಬೇಕು. ಕಂದಾಯ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತ್ಗವಾಗಿ ಇತ್ಯರ್ಥಪಡಿಸಬೇಕು. ಸಮಸ್ಯೆಗಳಿದ್ದರೆಜಿಲ್ಲಾಡಳಿತದ ಗಮನಕ್ಕೆ ತರಬೇಕು' ಎಂದು ಸೂಚಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-24-1269300338

