Dailyhunt
ಎರೆಹುಳು ತೊಟ್ಟಿ ನಿರ್ಮಾಣ ಆ.15ರಿಂದ

ಎರೆಹುಳು ತೊಟ್ಟಿ ನಿರ್ಮಾಣ ಆ.15ರಿಂದ

ಹಾವೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಾದ್ಯಂತ ಆಗಸ್ಟ್ 15ರಿಂದ ಎರಡು ತಿಂಗಳ ಕಾಲ 'ರೈತ ಬಂಧು ಯೋಜನೆ'ಯಡಿ ಎರೆಹುಳು ತೊಟ್ಟಿಗಳ ನಿರ್ಮಾಣ ಹಾಗೂ ಪೌಷ್ಟಿಕ ಕೈತೋಟಗಳ ನಿರ್ಮಾಣ ಕಾರ್ಯಕ್ರಮವನ್ನು ಅಭಿಯಾನದ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ರೈತಬಂಧು ಹಾಗೂ ಪೌಷ್ಟಿಕ ಕೈತೋಟ ಅಭಿಯಾನದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಎರೆಹುಳು ಗೊಬ್ಬರ ತಯಾರಿಕೆ ಜೊತೆಗೆ ಅಂಗನವಾಡಿ, ಶಾಲೆ, ವಿದ್ಯಾರ್ಥಿನಿಲಯ, ಪ್ರಾಥಮಿಕ ಆರೋಗ್ಯಗಳಲ್ಲಿ ಪೌಷ್ಟಿಕ ಕೈತೋಟ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು.

ನೀರಿನ ಸೌಕರ್ಯ ಹಾಗೂ ತಡೆಗೋಡೆ ಇರುವ ಸ್ಥಳಗಳಿಗೆ ಮೊದಲು ಆದ್ಯತೆ ನೀಡಬೇಕು. ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಕೈತೋಟ ಸಂರಕ್ಷಣೆ ಹಾಗೂ ಬಳಕೆ ಕುರಿತು ತರಬೇತಿ ನೀಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ಸ್ಥಾಪಿಸಲಾದ ಘನತ್ಯಾಜ್ಯ ಘಟಕಗಳು ನಿರ್ವಹಣೆಯಾಗುತ್ತಿಲ್ಲ. ಪಿಡಿಒಗಳು ಕಾಳಜಿಯಿಂದ ಇದನ್ನು ನಿರ್ವಹಿಸಬೇಕು. ಗ್ರಾಮಗಳ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಬೇರ್ಪಡಿಸಿ ನಿರ್ವಹಣೆ ಮಾಡಬೇಕು. ಗ್ರಾಮಗಳ ವಾರ್ಡ್‌ಗಳ ಅನುಸಾರ ಎಷ್ಟು ದಿನಕ್ಕೆ ಕಸ ಸಂಗ್ರಹಣೆ, ಸಿಬ್ಬಂದಿ ವೇತನ, ವಾಹನ ಬಾಡಿಗೆ, ಇಂಧನ ಇತರೆ ಖರ್ಚುಗಳ ಕುರಿತು ಕ್ರಿಯಾಯೋಜನೆ ತಯಾರಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ 618 ಕೆರೆ-ಕಟ್ಟೆ, ಗೋಕಟ್ಟೆ ಸಾಂಪ್ರದಾಯಿಕ ಜಲಮೂಲಗಳ ಪುನಶ್ಚೇತನಕ್ಕೆ ಸಮೀಕ್ಷೆ ಮಾಡಲಾಗಿದೆ. ಆದರೆ ಈವರೆಗೆ ಕೆಲಸ ಆರಂಭವಾಗಿಲ್ಲ. ಕೂಡಲೇ ಕೆಲಸ ಆರಂಭಿಸಿ ಕಾಮಗಾರಿ ಪೂರ್ಣಗೊಳಿಸಿ, ಯಾವುದೇ ಕಾರಣಕ್ಕೂ ಸಿಮೆಂಟ್ ಪ್ಲಾಸ್ಟರ್ ಮಾಡಬೇಡಿ. 44 ಹೊಸ ಕೆರೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಮಳೆ ಕಾರಣ ಕೆಲಸ ವಿಳಂಬವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ, ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ರಾಜಕುಮಾರ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯದರ್ಶಿಗಳು, ಎಲ್ಲ ಗ್ರಾಮ ಪಂಚಾಯಿತಿಗಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani