ಹರಿಹರ: ನಗರದಲ್ಲಿ ₹ 20 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮೂರು ವರ್ಷಗಳ ಹಿಂದೆ ಉದ್ಘಾಟನೆಯಾಗಿದ್ದು, ವಾರದೊಳಗೆ ಸೇವೆ ಆರಂಭಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಯ ಕರ್ನಾಟಕ ಸಂಘಟನೆ ಎಚ್ಚರಿಕೆ ನೀಡಿದೆ.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಡಾ.ಕೆ.ಎಸ್. ಮಧು ಅವರಿಗೆ ಶುಕ್ರವಾರ ದಾವಣಗೆರೆಯಲ್ಲಿ ಮನವಿ ಸಲ್ಲಿಸಿ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಗೋವಿಂದ ಮಾತನಾಡಿ, 'ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಿರ್ಮಿಸಿರುವ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡವು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ' ಎಂದು ಆರೋಪಿಸಿದರು.
'ಮಹಿಳೆಯರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಥ ಮುಖ್ಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿ, ಒಂದು ವಾರದೊಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಘಟನೆಯ ವತಿಯಿಂದ ಹೋರಾಟ ನಡೆಸಲಾಗುವುದು' ಎಂದು ಎಚ್ಚರಿಸಿದರು.
'ಈಗಿರುವ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ, ಲ್ಯಾಬ್ ಸೇರಿದಂತೆ ವಿವಿಧ ವೈದ್ಯಕೀಯ ಉಪಕರಣಗಳು ದುರಸ್ತಿಯಾಗದೇ ಇರುವುದರಿಂದ ರೋಗಿಗಳು ಔಷಧಿಗಳನ್ನು ಹೊರಗಿನಿಂದ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ' ಎಂದು ದೂರಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಆನಂದ್ ಎಂ.ಆರ್., ಸಂಘಟನಾ ಕಾರ್ಯದರ್ಶಿ ಮಧು ಎಂ., ವಿದ್ಯಾರ್ಥಿ ಘಟಕದ ಅಧ್ಯಕ್ಷ ಶ್ರೀನಿವಾಸ್ ಎಚ್.ಪಿ., ಸಮೀವುಲ್ಲಾ, ಹನುಮಂತ, ಸುನಿಲ್, ಜೀವನ್, ಅರುಣ್, ತಿಪ್ಪೇಶ್, ಶಿವಪುತ್ರ, ಜಾನಿ ಮತ್ತಿತರರು ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-43-1809036206

